ಬೆಂಗಳೂರು: `ವಿಕಾರ ಮನೋಭಾವದ ಕೆಲ ಸಾಹಿತಿಗಳು ಕಾಂಗ್ರೆಸ್ನಿಂದ ಸವಲತ್ತುಗಳನ್ನು ಪಡೆಯುವ ಉದ್ದೇಶದಿಂದ ಬಿಜೆಪಿ ಬಗ್ಗೆ ಆಕ್ರಮಣಕಾರಿ ಹೇಳಿಕೆಗಳನ್ನು ಕೊಟ್ಟಿದ್ದಾರೆ' ಎಂದು ವಿಧಾನಪರಿಷತ್ ಸದಸ್ಯೆ ಡಾ.ಎಸ್.ಆರ್. ಲೀಲಾ ಅವರು ದೂರಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ನ ಪದಕೋಶದಲ್ಲಿ ಅಲ್ಪಸಂಖ್ಯಾತರು ಎಂದರೆ ಕೇವಲ ಮುಸಲ್ಮಾನರು. ಆದರೆ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ದೇಶದಲ್ಲಿ ಮುಸಲ್ಮಾನರ ಸ್ಥಿತಿ ಚಿಂತಾಜನಕವಾಗಿದೆ ಎಂದು ವ್ಯಂಗವಾಡಿದರು.
ವಿಧಾನಪರಿಷತ್ ಸದಸ್ಯ ಡಾ. ದೊಡ್ಡರಂಗೇಗೌಡ ಅವರು ಮಾತನಾಡಿ, `ತಮ್ಮ ಬೇಳೆ ಬೇಯಿಸಿಕೊಳ್ಳಲು ಕೆಲ ಸಾಹಿತಿಗಳು ಬಿಜೆಪಿ ಕೋಮುವಾದಿ ಪಕ್ಷ ಎಂದು ಟೀಕೆ ಮಾಡಿದ್ದಾರೆ. ಇದು ಜ್ಞಾನಪೀಠ ಪಡೆದವರಿಗೆ ಹಾಗೂ ಅವರನ್ನು ಬೆಂಬಲಿಸುವವರಿಗೆ ಶೋಭೆ ತರುವುದಿಲ್ಲ' ಎಂದರು.
ಎನ್ಡಿಎ ಸರ್ಕಾರ ಆಡಳಿತದಲ್ಲಿರುವಾಗ ಅಲ್ಪಸಂಖ್ಯಾತರ ಏಳಿಗೆಗಾಗಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. ರಾಜ್ಯದಲ್ಲಿ ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ನೀಡುವ ಮಠಗಳಿಗೆ ಬಿಜೆಪಿ ಸರ್ಕಾರ ಹಣ ನೀಡಿದೆ. ಇಂಥ ಪಕ್ಷದ ಬಗ್ಗೆ ಟೀಕೆ ಮಾಡುವುದರಲ್ಲಿ ಯಾವ ಪುರುಷಾರ್ಥವೂ ಇಲ್ಲ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.