ಬೆಂಗಳೂರು: ಸರ್ಕಾರಿ ಭೂಮಿಯ ಡಿ ನೋಟಿಫಿಕೇಷನ್ ಹಗರಣದಲ್ಲಿ ಶನಿವಾರ ಜಾಮೀನು ಅರ್ಜಿ ನಿರಾಕರಣೆಗೊಂಡು ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಜೈಲು ಮುಟ್ಟಿ ಭಾನುವಾರ ನಸುಕಿನಲ್ಲಿ ಅಸ್ವಸ್ಥರಾಗಿ ಆಸ್ಪತ್ರೆಗೆ ಸೇರಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಎರಡು ಆಸ್ಪತ್ರೆಗಳಲ್ಲಿ ಸಂಪೂರ್ಣ ತಪಾಸಣೆಗೆ ಒಳಗಾಗಿ, ಚಿಕಿತ್ಸೆ ಪಡೆದ ನಂತರ ಕೊನೆಗೆ ಬುಧವಾರ ಬೆಳಿಗ್ಗೆ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹವನ್ನು ಸೇರಿದ್ದಾರೆ.
ಅನಾರೋಗ್ಯದ ಕಾರಣದಿಂದ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಾಗಿ, ಹೃದಯ ಸಂಬಂಧಿ ಕಾಯಿಲೆಗಳಲ್ಲದ್ದು ಪತ್ತೆಯಾದ ನಂತರ ಅವರನ್ನು ಅಲ್ಲಿಂದ ಮಂಗಳವಾರ ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು. ನಂತರ ಅವರನ್ನು ಅಲ್ಲಿಂದ ಬುಧವಾರ ಬೆಳಿಗ್ಗೆ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹಕ್ಕೆ ಮರಳಿ ಕರೆತರಲಾಗಿದೆ.
ಆಸ್ಪತ್ರೆಯಿಂದ ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಅಂಬುಲೆನ್ಸ್ನಲ್ಲಿ ಯಡಿಯೂರಪ್ಪ ಅವರನ್ನು ಕಾರಾಗೃಹಕ್ಕೆ ಕರೆತರಲಾಯಿತು. ನಿಯಮಾವಳಿಯಂತೆ ಕಾರಾಗೃಹದಲ್ಲಿರುವ ಆಸ್ಪತ್ರೆಯಲ್ಲಿ ಮತ್ತೆ ಅವರ ಆರೋಗ್ಯ ತಪಾಸಣೆ ಮಾಡಿಸಿ ನಂತರ ಜೈಲು ಕೊಠಡಿಗೆ ಸ್ಥಳಾಂತರಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.