ADVERTISEMENT

ಇಬ್ಬರ ವಿರುದ್ಧ ಕ್ರಮ ವಿಳಂಬ

​ಪ್ರಜಾವಾಣಿ ವಾರ್ತೆ
Published 14 ಮೇ 2012, 19:30 IST
Last Updated 14 ಮೇ 2012, 19:30 IST

ಕಾರವಾರ: ದಾಂಡೇಲಿಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮದನ ನಾಯಕ ಹತ್ಯೆ ಪ್ರಕರಣದ ಸಂಬಂಧ ಬಂಧನದಲ್ಲಿರುವ ಆರು ಆರೋಪಿಗಳ ಪೈಕಿ ಇಬ್ಬರು ಸರ್ಕಾರಿ ನೌಕರರಾಗಿದ್ದರೂ ಅವರ ವಿರುದ್ಧ ಇನ್ನೂ ಶಿಸ್ತು ಕ್ರಮ ಜರುಗಿಸಿಲ್ಲ!

ಅರೋಪಿಗಳಾದ ಅರವಿಂದ ಚವ್ಹಾಣ ದಾಂಡೇಲಿ ನಗರಸಭೆಯಲ್ಲಿ ಸಮುದಾಯ ಸಂಘಟನಾ ಅಧಿಕಾರಿ ಮತ್ತು ಶೈಲಜಾ ಚವ್ಹಾಣ ಹಳಿಯಾಳ ತಾಲ್ಲೂಕಿನ ಭಾಗವತಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕಿ. ಸರ್ಕಾರಿ ನೌಕರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾದರೆ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಎನ್ನುವ ನಿಯಮವಿದೆ. ಘಟನೆ ನಡೆದು ವಾರ ಕಳೆದರೂ ಇಬ್ಬರೂ ನೌಕರರ ಮೇಲೆ ಕ್ರಮ ಕೈಗೊಳ್ಳದೆ ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

`ಆರೋಪಿ ಅರವಿಂದ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದೇವೆ. ಜಿಲ್ಲಾಧಿಕಾರಿಗಳು ವರದಿಯನ್ನು ಪೌರಾಡಳಿತ ಇಲಾಖೆ  ನಿರ್ದೇಶಕರಿಗೆ ಕಳುಹಿಸಿದ್ದಾರೆ. ಅಲ್ಲಿಂದ ಆದೇಶ ಬಂದ ನಂತರ ಕ್ರಮ ತೆಗೆದುಕೊಳ್ಳಲಾಗುವುದು~ ಎನ್ನುತ್ತಾರೆ ದಾಂಡೇಲಿ ನಗರಸಭೆ ಆಯುಕ್ತ ಸಿ.ಡಿ. ದಳವಿ.

`ಶಿಕ್ಷಕಿ ಶೈಲಜಾ ಅವರ ವಿರುದ್ಧ ದೂರು ದಾಖಲಾಗಿರುವ ಸಂಬಂಧ ಎಫ್‌ಐಆರ್ ಪ್ರತಿ ಕೇಳಲಾಗಿದೆ. ಅದು ಕೈ ಸೇರಿದ ತಕ್ಷಣವೇ ಅಮಾನತು ಆದೇಶ ಹೊರಡಿಸಲಾಗುವುದು~ ಎಂದು ಶಿರಸಿ ಶೈಕ್ಷಣಿಕ ಜಿಲ್ಲೆ ಡಿಡಿಪಿಐ ಡಿ.ಕೆ.ಶಿವಕುಮಾರ `ಪ್ರಜಾವಾಣಿ~ಗೆ ತಿಳಿಸಿದ್ದಾರೆ.

ತನಿಖೆ ನಂತರ ಕ್ರಮ: ದಾಂಡೇಲಿ ಗ್ರಾಮೀಣ ಠಾಣೆಯ ಪಿಎಸ್‌ಐ ಪ್ರವೀಣ ನೀಲಮ್ಮನವರ ಪ್ರಕರಣ ದಾಖಲಿಸಿಕೊಳ್ಳಲು ವಿಳಂಬ ಮಾಡಿದ್ದಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಸುತ್ತಿದೆ. ತಪ್ಪಿತಸ್ಥರೆನ್ನುವುದು ಕಂಡುಬಂದರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು~ ಎಂದು ಎಸ್‌ಪಿ ಕೆ.ಟಿ. ಬಾಲಕೃಷ್ಣ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.