ಬೆಂಗಳೂರು: ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯು ತಾಂತ್ರಿಕ ಶಿಕ್ಷಣ ಗುಣಮಟ್ಟ ಸುಧಾರಣೆ ಯೋಜನೆ-2ರ ಅಡಿಯಲ್ಲಿ ಉತ್ಕೃಷ್ಟ ಶಿಕ್ಷಣ ಕೇಂದ್ರ (ಸೆಂಟರ್ ಆಫ್ ಎಕ್ಸಲೆನ್ಸ್) ಸ್ಥಾಪನೆಗೆ ರಾಜ್ಯದ ಮೂರು ಎಂಜಿನಿಯರಿಂಗ್ ಕಾಲೇಜುಗಳನ್ನು ಆಯ್ಕೆ ಮಾಡಿದೆ.
ಮಂಗಳವಾರ ವಿಧಾನಸೌಧದಲ್ಲಿ ಈ ಕುರಿತು ಪತ್ರಕರ್ತರ ಜೊತೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಅವರು, ಬೆಂಗಳೂರಿನ ಪಿಇಎಸ್ ಎಂಜಿನಿಯರಿಂಗ್ ಕಾಲೇಜು, ತುಮಕೂರಿನ ಸಿದ್ದಗಂಗಾ ಎಂಜಿನಿಯರಿಂಗ್ ಕಾಲೇಜು ಮತ್ತು ಬೆಂಗಳೂರಿನ ಆರ್.ವಿ. ಎಂಜಿನಿಯರಿಂಗ್ ಕಾಲೇಜುಗಳನ್ನು ಈ ಯೋಜನೆಗೆ ಆಯ್ಕೆ ಮಾಡಲಾಗಿದೆ. ಈ ಸಂಸ್ಥೆಗಳಲ್ಲಿ ಸ್ಥಾಪಿಸುವ ಕೇಂದ್ರಗಳಲ್ಲಿ ಸಂಶೋಧನೆಗೆ ಅವಕಾಶ ನೀಡಲಾಗುತ್ತದೆ ಎಂದರು.
ದೇಶದಲ್ಲಿ ಇಂತಹ 30 ಕೇಂದ್ರಗಳನ್ನು ಅಸ್ತಿತ್ವಕ್ಕೆ ತರಲಾಗುತ್ತಿದೆ. ಈ ಕಾಲೇಜುಗಳಿಗೆ ತಲಾ ಐದು ಕೋಟಿ ರೂಪಾಯಿ ಅನುದಾನ ನೀಡಲಾಗುತ್ತದೆ. ಕೇಂದ್ರ ಸರ್ಕಾರ ಶೇಕಡ 75ರಷ್ಟು ಮತ್ತು ರಾಜ್ಯ ಸರ್ಕಾರ ಶೇ 25ರಷ್ಟು ಅನುದಾನ ಒದಗಿಸುತ್ತದೆ ಎಂದು ತಿಳಿಸಿದರು.
ತಾಂತ್ರಿಕ ಶಿಕ್ಷಣ ಗುಣಮಟ್ಟ ಸುಧಾರಣೆ ಯೋಜನೆಯ ಅಡಿಯಲ್ಲಿ ಈಗಾಗಲೇ ರಾಜ್ಯದ 16 ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಾಂತ್ರಿಕ ಶಿಕ್ಷಣ ಗುಣಮಟ್ಟ ವೃದ್ಧಿ ಕಾರ್ಯಕ್ರಮ ಜಾರಿಯಲ್ಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.