ADVERTISEMENT

ಎಂಜಿನಿಯರಿಂಗ್ ಕೌನ್ಸೆಲಿಂಗ್ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2011, 19:30 IST
Last Updated 21 ಜೂನ್ 2011, 19:30 IST

ಬೆಂಗಳೂರು: ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಪೂರ್ಣ ಪ್ರಮಾಣದಲ್ಲಿ ಸೀಟು ಹಂಚಿಕೆ ಪಟ್ಟಿ ಪ್ರಕಟಿಸದ ಕಾರಣ ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕೆ ಇದೇ 27ರಿಂದ ನಡೆಯಬೇಕಾಗಿದ್ದ ಕೌನ್ಸೆಲಿಂಗ್ ಮುಂದೂಡಲು ಸರ್ಕಾರ ನಿರ್ಧರಿಸಿದ್ದು, ಪರಿಷ್ಕೃತ ವೇಳಾಪಟ್ಟಿ ಒಂದೆರಡು ದಿನಗಳಲ್ಲಿ ಪ್ರಕಟವಾಗಲಿದೆ.

ಉನ್ನತ ಶಿಕ್ಷಣ ಸಚಿವ ಡಾ.ವಿ.ಎಸ್.ಆಚಾರ್ಯ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಲತಾ ಕೃಷ್ಣರಾವ್ ಅವರು ಮಂಗಳವಾರ ನವದೆಹಲಿಗೆ ತೆರಳಿ ಎಐಸಿಟಿಇ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರೂ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿಲ್ಲ. ಈಗಿನ ಲೆಕ್ಕಾಚಾರದ ಪ್ರಕಾರ ಇದೇ 28ರಂದು ನಡೆಯುವ ಸಭೆಯಲ್ಲಿ ಬಾಕಿ ಇರುವ 35 ಕಾಲೇಜುಗಳ ಸೀಟು ಹಂಚಿಕೆ ಪಟ್ಟಿಗೆ ಒಪ್ಪಿಗೆ ಸಿಗುವ ಸಂಭವವಿದೆ.

ಹೀಗಾಗಿ 27ರಿಂದ ನಡೆಯುವ ಕೌನ್ಸೆಲಿಂಗ್ ಮುಂದೂಡಲು ಸರ್ಕಾರ ನಿರ್ಧರಿಸಿದೆ. 28ರ ಸಭೆಯಲ್ಲಿ ಒಪ್ಪಿಗೆ ದೊರೆತರೆ ಜುಲೈ 7ರ ನಂತರ ಕೌನ್ಸೆಲಿಂಗ್ ಆರಂಭವಾಗುವ ಸಂಭವವಿದ್ದು, ಪರಿಷ್ಕೃತ ವೇಳಾಪಟ್ಟಿ ಬುಧವಾರ ಇಲ್ಲವೆ ಗುರುವಾರ ಪ್ರಕಟವಾಗಲಿದೆ ಎಂದು ಉನ್ನತ ಮೂಲಗಳು `ಪ್ರಜಾವಾಣಿ~ಗೆ ತಿಳಿಸಿವೆ.

ಆಚಾರ್ಯ ಅಸಮಾಧಾನ: ಎಐಸಿಟಿಇ ಸಕಾಲಕ್ಕೆ ಸೀಟು ಹಂಚಿಕೆ ಪಟ್ಟಿ ಪ್ರಕಟಿಸದ ಕಾರಣ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಕೌನ್ಸೆಲಿಂಗ್ ನಡೆಸಲು ಸರ್ಕಾರ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಆದರೆ ಎಐಸಿಟಿಇ ಸ್ಪಂದಿಸುತ್ತಿಲ್ಲ ಎಂದು ಸಚಿವ ಆಚಾರ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಬಿ.ಎಂ.ಎಸ್., ನಿಟ್ಟೆ ಮೀನಾಕ್ಷಿ ಸೇರಿದಂತೆ ಪ್ರಮುಖ ಕಾಲೇಜುಗಳ ಸೀಟು ಹಂಚಿಕೆ ಪಟ್ಟಿ ಪ್ರಕಟವಾಗದ ಕಾರಣ 27ರಿಂದ ಕೌನ್ಸೆಲಿಂಗ್ ನಡೆಸಿದರೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಕೌನ್ಸೆಲಿಂಗ್ ಮುಂದೂಡಬೇಕಾಗುತ್ತದೆ. ಒಂದೆರಡು ದಿನದಲ್ಲಿ ಹೊಸ ದಿನಾಂಕ ಪ್ರಕಟಿಸಲಾಗುವುದು ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.