ಕಲಬುರ್ಗಿ: ಜಿಲ್ಲೆಯ ಚಿತ್ತಾಪುರ ತಾಲ್ಲೂಕು ಕಾಳಗಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ನಿಗದಿಯಾಗಿದ್ದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯ ಗಣಿತ ಪ್ರಶ್ನೆ ಪತ್ರಿಕೆ ಬಹಿರಂಗವಾಗಿದೆ.
ಬೆಳಿಗ್ಗೆ 9.30ಕ್ಕೆ ಪರೀಕ್ಷೆ ಆರಂಭವಾಗಿದೆ. ಇದಾದ ಸ್ವಲ್ಪ ಹೊತ್ತಿನಲ್ಲಿ ಬ್ಲಾಕ್ ನಂ. 10 ಕಿಟಕಿ ಸಮೀಪ ಬಂದ ಪ್ರಧಾನಕುಮಾರ ಎಂಬ ಯುವಕನು ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಯಿಂದ ಪ್ರಶ್ನೆಪತ್ರಿಕೆಯನ್ನು ತೆಗೆದುಕೊಂಡು ಮೊಬೈಲ್ನಿಂದ ಫೋಟೊ ತೆಗೆದಿದ್ದಾನೆ. ಬಳಿಕ ಅದನ್ನು ವಾಟ್ಸ್ ಆ್ಯಪ್ನಲ್ಲಿ ಬಹಿರಂಗಗೊಳಿಸಿದ್ದಾನೆ.
ಇದಾದ ಕೆಲಸಮಯದ ಬಳಿಕ ಮತ್ತೆ ಇಬ್ಬರು ಯುವಕರು ಪ್ರಶ್ನೆ ಪತ್ರಿಕೆಯ ಫೋಟೊ ತೆಗೆಯಲು ಮುಂದಾದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದು, ವಿಚಾರಣೆಗೆ ಒಳಪಡಿಸಿದ್ದಾರೆ.
'ವಶಕ್ಕೆ ಪಡೆದಿರುವ ಇಬ್ಬರ ಪೈಕಿ ಒಬ್ಬ ಯುವಕನ ಸಹೋದರಿ ಅದೇ ಪರೀಕ್ಷಾ ಕೇಂದ್ರದಲ್ಲಿ ಗಣಿತ ಪರೀಕ್ಷೆ ಬರೆಯುತ್ತಿದ್ದು, ಆಕೆಗೆ ನೆರವಾಗುವ ಉದ್ದೇಶದಿಂದ ಮೊಬೈಲ್ ಮೂಲಕ ಫೋಟೊ ತೆಗೆಯಲು ಹೋಗಿರುವುದಾಗಿ ಒಪ್ಪಿಕೊಂಡಿದ್ದಾನೆ' ಎಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ.
ಈ ಕುರಿತು 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶಾಂತಗೌಡ ಹಾಗೂ ಚಿತ್ತಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್ ಬನ್ನಿಕಟ್ಟಿ, 'ಮೊಬೈಲ್ ಮೂಲಕ ಯುವಕರು ಪ್ರಶ್ನೆ ಪತ್ರಿಕೆಯ ಫೋಟೊ ತೆಗೆದು ವಾಟ್ಸ್ ಆ್ಯಪ್ನಲ್ಲಿ ಹರಿಬಿಟ್ಟಿರುವುದು ತಿಳಿದು ಬಂದಿದೆ. ಪ್ರಶ್ನೆ ಪತ್ರಿಕೆ ಕೊಟ್ಟಿರುವ ವಿದ್ಯಾರ್ಥಿಯನ್ನು ಡಿಬಾರ್ ಮಾಡಲು ಸೂಚಿಸಲಾಗಿದೆ. ಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು' ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.