ADVERTISEMENT

ಐಎಎಸ್‌– ಐಪಿಎಸ್‌ ಮತ್ತೊಂದು ಸುತ್ತಿನ ವರ್ಗಾವಣೆಗೆ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2018, 19:30 IST
Last Updated 30 ಮಾರ್ಚ್ 2018, 19:30 IST

ಬೆಂಗಳೂರು: ಐಎಎಸ್‌ ಮತ್ತು ಐಪಿಎಸ್‌ ಅಧಿಕಾರಿಗಳ ಮತ್ತೊಂದು ಸುತ್ತಿನ ವರ್ಗಾವಣೆಗೆ ಸಿದ್ಧತೆ ನಡೆದಿದ್ದು, ಈ ಬಾರಿಯ ವರ್ಗಾವಣೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಮೇಲುಸ್ತುವಾರಿಯಲ್ಲಿ ನಡೆಯಲಿದೆ.

‘ಚುನಾವಣೆಗೆ ಮೊದಲೇ ಅಧಿಕಾರಿಗಳ ವರ್ಗಾವಣೆಗೆ ಆಗಲಿದೆ. ಈಗಾಗಲೇ ಪಟ್ಟಿ ಸಿದ್ಧವಾಗಿದೆ. ಇದಕ್ಕೆ ಪೂರಕವಾಗಿ ರಾಜ್ಯ ಸರ್ಕಾರ ಪಟ್ಟಿಯೊಂದನ್ನು ನೀಡಿದೆ. ವರ್ಗಾವಣೆ ಚುನಾವಣೆ ಪ್ರಕ್ರಿಯೆಯ ಭಾಗವಾಗಿದೆ. ನಿರ್ಣಾಯಕ ಹುದ್ದೆಗಳಿಗೆ ಎಚ್ಚರಿಕೆ ವಹಿಸಿ ಅಧಿಕಾರಿಗಳನ್ನು ನೇಮಿಸಲಾಗುವುದು’ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿ ಮೂಲಗಳು ತಿಳಿಸಿವೆ.

ಚುನಾವಣೆ ದಿನಾಂಕ ಘೋಷಣೆ ಆಗುವುದಕ್ಕೆ ಮೊದಲೇ ಆಡಳಿತ ಪಕ್ಷದ ಶಾಸಕರು ಮತ್ತು ಸಚಿವರು ತಮಗೆ ಬೇಕಾದ ಅಧಿಕಾರಿಗಳನ್ನು ತಾವಯ ಪ್ರತಿನಿಧಿಸುವ ತಾಲ್ಲೂಕು ಮತ್ತು ಜಿಲ್ಲೆಗಳಲ್ಲಿ ನೇಮಕ ಮಾಡಿಕೊಂಡಿದ್ದಾರೆ. ಭಾರಿ ಸಂಖ್ಯೆಯಲ್ಲಿ ನಡೆದ ಈ ವರ್ಗಾವಣೆಯಿಂದ ಚುನಾವಣೆಯಲ್ಲಿ ಅಕ್ರಮ ನಡೆಯಬಹುದು ಎಂಬುದಾಗಿ ವಿರೋಧ ಪಕ್ಷಗಳು ವ್ಯಕ್ತಪಡಿಸಿದ್ದವು. ಆದರೆ, ಇಲ್ಲಿಯವರೆಗೆ ಯಾವುದೇ ದೂರುಗಳು ದಾಖಲಾಗಿಲ್ಲ ಎಂದು ಮೂಲಗಳು ಹೇಳಿವೆ.

ADVERTISEMENT

ಚುನಾವಣಾ ಆಯೋಗದ ಬಳಿ ಎಲ್ಲ ಅಧಿಕಾರಿಗಳ ಸಂಪೂರ್ಣ ಮಾಹಿತಿ ಇದೆ. ಅದನ್ನು ಸೂಕ್ತ ರೀತಿಯಲ್ಲಿ ಪರಿಶೀಲಿಸಿ ಅಧಿಕಾರಿಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗುವುದು ಆಯೋಗ ತಿಳಿಸಿದೆ.

ಈ ಮಧ್ಯೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಪ್ರಧಾನ ಕಾರ್ಯದರ್ಶಿಯವರು ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಪತ್ರ ಬರೆದು, 2017 ರ ಜನವರಿಯಲ್ಲಿ ಆರಂಭಿಸಿರುವ 815 ಪಿಡಿಒ ಮತ್ತು 809 ಪ್ರಥಮ ದರ್ಜೆ ಪಂಚಾಯತ್‌ ಕಾರ್ಯದರ್ಶಿಗಳ ನೇಮಕಾತಿ ಪ್ರಕ್ರಿಯೆ ಮುಂದುವರಿಸಬಹುದೇ ಎಂದು ಅಭಿಪ್ರಾಯ ಕೇಳಿದೆ.

ಕೆಲವು ಜಿಲ್ಲೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅನುಮತಿ ಕೋರಿ ಪತ್ರ ಬರೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.