ADVERTISEMENT

ಕಲಾವಿದರ ಪ್ರಶಸ್ತಿ ಮೊತ್ತ ಹೆಚ್ಚಳ: ಕಾರಜೋಳ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2012, 19:30 IST
Last Updated 3 ಮಾರ್ಚ್ 2012, 19:30 IST
ಕಲಾವಿದರ ಪ್ರಶಸ್ತಿ ಮೊತ್ತ ಹೆಚ್ಚಳ: ಕಾರಜೋಳ
ಕಲಾವಿದರ ಪ್ರಶಸ್ತಿ ಮೊತ್ತ ಹೆಚ್ಚಳ: ಕಾರಜೋಳ   

ಚಿತ್ರದುರ್ಗ: ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ ಜನಪದ ತಜ್ಞರಿಗೆ ಮತ್ತು ಕಲಾವಿದರಿಗೆ ನೀಡುವ ಪ್ರಶಸ್ತಿ ಮೊತ್ತವನ್ನು ಹೆಚ್ಚಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಗೋವಿಂದ ಎಂ. ಕಾರಜೋಳ ಭರವಸೆ ನೀಡಿದರು.

ಶನಿವಾರ ನಗರದ ತರಾಸು ರಂಗಮಂದಿರದಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ 2011ನೇ ಸಾಲಿನ ನೀಡುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.ಜಾನಪದ ತಜ್ಞರಿಗೆ ನೀಡುವ ಪ್ರಶಸ್ತಿ ಮೊತ್ತವನ್ನು ರೂ.10ರಿಂದ 20 ಸಾವಿರಕ್ಕೆ ಹೆಚ್ಚಿಸಲಾಗುವುದು. ಅದೇ ರೀತಿಯಲ್ಲಿ ಕಲಾವಿದರಿಗೆ ಪ್ರಸ್ತುತ ನೀಡುತ್ತಿರುವ ರೂ. 5 ಸಾವಿರ ಮೊತ್ತವನ್ನು 10 ಸಾವಿರಕ್ಕೆ ಹೆಚ್ಚಿಸಲಾಗುವುದು ಎಂದು ತಿಳಿಸಿದರು.

ಅಕಾಡೆಮಿ ಅಧ್ಯಕ್ಷರಿಗೆ ಪ್ರವಾಸ ಭತ್ಯೆಯನ್ನು 10 ಸಾವಿರ ರೂಪಾಯಿ ನೀಡಲಾಗುವುದು. ಜತೆಗೆ, ಇನ್ನೂ 2,500 ಕಲಾವಿದರಿಗೆ ಮಾಸಾಶನ ನೀಡಲಾಗುವುದು. ಕಲಾವಿದರಿಗಾಗಿ ರೂಪಿಸಿರುವ ಕ್ಷೇಮನಿಧಿಗೆ ಸರ್ಕಾರ ರೂ 25 ಲಕ್ಷ ನೀಡಲಿದೆ. ಜತೆಗೆ, ಅಕಾಡೆಮಿಗೆ 1 ಕೋಟಿ ನೀಡಲು ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊ.ರು. ಚನ್ನಬಸಪ್ಪ ಮಾತನಾಡಿದರು.ಸಂಸದ ಜನಾರ್ದನಸ್ವಾಮಿ, ಶಾಸಕ ಎಸ್.ಕೆ. ಬಸವರಾಜನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಬಿ. ಬಸವರಾಜು ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.