ಬೆಂಗಳೂರು: ವಿಧಾನಪರಿಷತ್ ಸದಸ್ಯ ಎಂ.ಡಿ. ಲಕ್ಷ್ಮೀನಾರಾಯಣ ಕಾಂಗ್ರೆಸ್ ಸೇರುವ ಬಗ್ಗೆ ಅಂತಿಮ ತೀರ್ಮಾನ ಕೈಗೊಂಡಿದ್ದು, ಇದೇ 18ರಂದು ಅಧಿಕೃತವಾಗಿ ಪ್ರಕಟಿಸುವ ನಿರೀಕ್ಷೆ ಇದೆ.
ಭಾನುವಾರ ನಗರದ ದೇವಾಂಗ ಸಮಾಜದ ಸಮುದಾಯ ಭವನದಲ್ಲಿ ಕೆಜೆಪಿ ಪ್ರಮುಖ ಮುಖಂಡರು ಹಾಗೂ ನೇಕಾರರ ಸಂಘದ ಜಿಲ್ಲಾ ಪದಾಧಿಕಾರಿಗಳ ಜತೆ ಚರ್ಚೆ ನಡೆಸಿದ ನಂತರ ಲಕ್ಷ್ಮೀನಾರಾಯಣ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಸಭೆಯಲ್ಲಿ 27 ಜಿಲ್ಲಾ ನೇಕಾರರ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಆಡಳಿತಾರೂಢ ಕಾಂಗ್ರೆಸ್ ಪಕ್ಷ ಸೇರಿದರೆ ಹೆಚ್ಚು ಅನುಕೂಲ. ಇದರಿಂದ ಕ್ಷೇತ್ರದ ಅಭಿವೃದ್ಧಿಗೂ ಪೂರಕವಾಗಲಿದೆ ಎಂದು ಬೆಂಬಲಿಗರು ಸಭೆಯಲ್ಲಿ ಅಭಿಪ್ರಾಯಪಟ್ಟರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಹಾಗೂ ಎಐಸಿಸಿ ರಾಜ್ಯ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಅವರ ಜತೆಯೂ ಲಕ್ಷ್ಮೀನಾರಾಯಣ ಅಂತಿಮ ಸುತ್ತಿನ ಮಾತುಕತೆ ನಡೆಸಲಿದ್ದಾರೆ.
ಪಕ್ಷದ ವರಿಷ್ಠರಿಂದ ಔಪಚಾರಿಕ ಅನುಮೋದನೆ ದೊರೆತ ನಂತರ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ ಎಂದು ನೇಕಾರರ ಸಂಘದ ರಾಜ್ಯಾಧ್ಯಕ್ಷರೂ ಆಗಿರುವ ಲಕ್ಷ್ಮೀನಾರಾಯಣ ತಿಳಿಸಿದರು.
ಭಾನುವಾರ ನಡೆದ ಸಭೆಯಲ್ಲಿ ಮಾಜಿ ಶಾಸಕರಾದ ಎಚ್.ಡಿ. ಬಸವರಾಜ್, ಲಿಂಗಪ್ಪ, ಕೊಳ್ಳೆಗಾಲ ಬಾಲರಾಜ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.