ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಸಮಾಜವಾದಿ ಪಕ್ಷದ ಶಾಸಕ ಸಿ.ಪಿ.ಯೋಗೇಶ್ವರ್ ಶೀಘ್ರವೇ ಕಾಂಗ್ರೆಸ್ ಸೇರುವುದು ಸ್ಪಷ್ಟವಾಗಿದೆ.
‘ಚುನಾವಣೆಯಲ್ಲಿ ಯಾರಿಗಾದರೂ ಬಹಿರಂಗ ಬೆಂಬಲ ನೀಡುವುದಕ್ಕಿಂತ ನೆಚ್ಚಿನ ಅಭ್ಯರ್ಥಿಯ ಜೊತೆಯಲ್ಲಿ ಇದ್ದು, ಅವರ ಗೆಲುವಿಗೆ ಸಹಕಾರಿಯಾಗುವುದು ಉತ್ತಮ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಜತೆ ಚರ್ಚೆ ನಡೆಯುತ್ತಿದೆ’ ಎಂದು ಯೋಗೇಶ್ವರ್ ಭಾನುವಾರ ‘ಪ್ರಜಾವಾಣಿ’ಗೆ ತಿಳಿಸಿದರು.
‘ಕಾಂಗ್ರೆಸ್ ಸೇರುವಂತೆ ಆ ಪಕ್ಷದ ಹಲವಾರು ಮುಖಂಡರು ನನ್ನನ್ನು ಕೋರಿದ್ದಾರೆ. ಸಚಿವ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಅವರೂ ನನ್ನನ್ನು ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಈ ವಿಷಯವಾಗಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಪಕ್ಷದ ರಾಷ್ಟ್ರೀಯ ಉಸ್ತುವಾರಿ ವಹಿಸಿರುವ ದಿಗ್ವಿಜಯ್ಸಿಂಗ್ ಅವರೊಡನೆ ಮಾತುಕತೆ ನಡೆದಿದ್ದು, ಮಂಗ-ಳವಾರ ಇನ್ನೊಂದು ಸುತ್ತಿನ ಮಾತುಕತೆ ನಡೆಯಲಿದೆ. ಒಂದು ವಾರದಲ್ಲಿ ಸ್ಪಷ್ಟ ಚಿತ್ರಣ ಹೊರಹೊಮ್ಮಲಿದೆ’ ಎಂದು ಅವರು ಪ್ರತಿಕ್ರಿಯಿಸಿದರು.
‘ಗೆದ್ದ ಎತ್ತಿನ ಬಾಲ ಅನಿವಾರ್ಯ’: ‘ಒಂದೊಂದು ಚುನಾವಣೆಯಲ್ಲಿ ಒಂದೊಂದು ಪಕ್ಷ ಬದಲಿಸುತ್ತಿದ್ದೇನೆ ಎಂಬ ಆರೋಪ ನನ್ನ ಮೇಲಿರುವುದು ನಿಜ. ಆದರೆ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಕಾಳಜಿ ಇರುವ ನನಗೆ ಗೆದ್ದ ಎತ್ತಿನ ಬಾಲ ಹಿಡಿಯುವುದು ಅನಿವಾರ್ಯವಾಗಿದೆ. ವೈಯಕ್ತಿಕ ಲಾಭಕ್ಕಿಂತ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ನಾನು ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ. ಕಾಂಗ್ರೆಸ್ ನನ್ನ ಮಾತೃ ಪಕ್ಷವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿಯೇ ಕಾಂಗ್ರೆಸ್ ಸೇರಲು ಮುಂದಾಗಿದ್ದೆ. ಆದರೆ, ಕೆಲವರ ಪಿತೂರಿಯಿಂದ ಆಗ ನನಗೆ ಕಾಂಗ್ರೆಸ್ ಟಿಕೆಟ್ ಸಿಗಲಿಲ್ಲ. ಈ ಭಾಗದಲ್ಲಿ ರಾಜಕೀಯವಾಗಿ ಎಚ್.ಡಿ.ಕುಮಾರಸ್ವಾಮಿ ಕುಟುಂಬವನ್ನು ಎದುರಿಸಿ, ನನ್ನ ಅಸ್ತಿತ್ವ ಉಳಿಸಿಕೊಳ್ಳಲೇ ಬೇಕಿತ್ತು. ಹೀಗಾಗಿ ರಾಷ್ಟ್ರೀಯ ಪಕ್ಷ ಎನಿಸಿದ ಸಮಾಜವಾದಿ ಪಕ್ಷದಿಂದ ಟಿಕೆಟ್ ಪಡೆದು ಸ್ಪರ್ಧಿಸಿದೆ. ಜನರು ನನ್ನ ನಿರ್ಧಾರ ಬೆಂಬಲಿಸಿ, ಚುನಾವಣೆಯಲ್ಲಿ ಗೆಲ್ಲಿಸಿದರು’ ಎಂದು ಅವರು ಉತ್ತರಿಸಿದರು.
ಡಿಕೆಶಿ ಆಗಲೇ ಹೇಳಿದ್ದರು: ‘ಸಿ.ಪಿ.ಯೋಗೇಶ್ವರ್ ಮೂಲತಃ ಕಾಂಗ್ರೆಸ್ಸಿಗ. ಅವರ ರಕ್ತದಲ್ಲಿಯೇ ಕಾಂಗ್ರೆಸ್ ಇದೆ. ಕಳೆದ ಉಪ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಬೆಂಬಲಿಸಿದ್ದರು. ಈಗಲೂ ಅಭಿವೃದ್ಧಿ ಕೆಲಸ ಮಾಡುವ ಪಕ್ಷವನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.
ಕಾಂಗ್ರೆಸ್ ಅವರ ಎಲ್ಲ ಅಭಿವೃದ್ಧಿ ಕೆಲಸಕ್ಕೂ ಸಹಕಾರ ನೀಡುತ್ತಿದ್ದು, ಚುನಾವಣೆಯಲ್ಲಿ ಅವರ ಸಹಕಾರ ಅಪೇಕ್ಷಿಸಿದೆ. ಅವರು ಪಕ್ಷ ಸೇರ್ಪಡೆಯಾದರೆ ಅಭ್ಯಂತರವಿಲ್ಲ’ ಎಂದು ಇಂದನ ಸಚಿವ ಡಿ.ಕೆ.ಶಿವಕುಮಾರ್ ಇತ್ತೀಚೆಗೆ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
ಯೋಗೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ 2013ರ ಆಗಸ್ಟ್ನಲ್ಲಿ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತೆರೆಯ ಮರೆಯಲ್ಲೇ ಬೆಂಬಲಿಸಿದ್ದರು.
ಪಕ್ಷದಿಂದ ಪಕ್ಷಕ್ಕೆ...
ನಟನಾಗಿದ್ದ ಸಿ.ಪಿ.ಯೋಗೇಶ್ವರ್ ಮೂಲತಃ ಕಾಂಗ್ರೆಸ್ನಲ್ಲಿದ್ದರು. ಚನ್ನಪಟ್ಟಣದಲ್ಲಿ 1999ರಲ್ಲಿ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಕಾರಣ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿ ಸಾದತ್ ಅಲಿಖಾನ್ ಮತ್ತು ಜನತಾದಳದ ವರದೇಗೌಡ ಅವರನ್ನು ಸೋಲಿಸಿದ್ದರು.
2004ರಲ್ಲಿ ಕಾಂಗ್ರೆಸ್ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾದ ಅವರು ಶಾಸಕರಾದರು. 2008ರಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದರು. ಆದರೆ ವರ್ಷದೊಳಗೆ ಅವರು ‘ಆಪರೇಷನ್ ಕಮಲ’ಕ್ಕೆ ಒಳಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದರು.
2009ರಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜೆಡಿಎಸ್ನ ಎಚ್.ಡಿ.ಕುಮಾರಸ್ವಾಮಿ ಎದುರು ಸೋತಿದ್ದರು. 2009ರಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಯೋಗೇಶ್ವರ್ ಜೆಡಿಎಸ್ನ ಎಂ.ಸಿ.ಅಶ್ವತ್ಥ್ ವಿರುದ್ಧ ಸೋಲುಂಡರು. ಎಂ.ಸಿ.ಅಶ್ವತ್ಥ ಅವರು ‘ಆಪರೇಷನ್ ಕಮಲ’ಕ್ಕೆ ತುತ್ತಾಗಿ ಬಿಜೆಪಿ ಸೇರಿದ್ದರಿಂದ 2010ರಲ್ಲಿ ಚನ್ನಪಟ್ಟಣ ಕ್ಷೇತ್ರಕ್ಕೆ ಮತ್ತೊಂದು ಉಪ ಚುನಾವಣೆ ಎದುರಾಯಿತು.
ಆಗಲೂ ಯೋಗೇಶ್ವರ್ ಬಿಜೆಪಿಯಿಂದ ಸ್ಪರ್ಧಿಸಿ ಜಯಸಾಧಿಸಿದರು.
ಬಿಜೆಪಿಯಲ್ಲಿ ಅರಣ್ಯ ಸಚಿವರಾಗಿ ಕಾರ್ಯನಿರ್ವಹಿಸಿದ ಅವರು, ಅವಧಿ ಪೂರ್ಣಗೊಳ್ಳುವ ಮೊದಲೇ ಸಚಿವ ಸ್ಥಾನ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಯಿಂದ ಹೊರ ನಡೆದರು. 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಪಡೆಯುವಲ್ಲಿ ವಿಫಲರಾದರು.
ನಾಮಪತ್ರ ಸಲ್ಲಿಸುವ ಕೊನೆಗಳಿಗೆಯಲ್ಲಿ ಸಮಾಜವಾದಿ ಪಕ್ಷದಿಂದ ‘ಬಿ–ಫಾರಂ’ ತಂದು ಉಮೇದುವಾರಿಕೆ ಸಲ್ಲಿಸಿದರು. ಚುನಾವಣೆಯಲ್ಲಿ ಜಯವನ್ನೂ ಸಾಧಿಸಿದರು. ಅವರೀಗ ಮರಳಿ ಮಾತೃ ಪಕ್ಷವಾದ ಕಾಂಗ್ರೆಸ್ನತ್ತ ಮುಖ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.