ADVERTISEMENT

ಕಾಂಗ್ರೆಸ್ ನಾಯಕರ ಉದ್ಧಟತನ: ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2011, 19:30 IST
Last Updated 11 ಫೆಬ್ರುವರಿ 2011, 19:30 IST

ಬೆಂಗಳೂರು:  ಕಾಂಗ್ರೆಸ್ ನಾಯಕರ ಹಟಮಾರಿತನ ಮತ್ತು ಉದ್ಧಟತನದಿಂದಾಗಿ ಮೈಸೂರು ಜಿಲ್ಲಾ ಪಂಚಾಯಿತಿಯಲ್ಲಿ ಕಾಂಗ್ರೆಸ್- ಜೆಡಿಎಸ್ ನಡುವೆ ಹೊಂದಾಣಿಕೆ ಸಾಧ್ಯವಾಗಲಿಲ್ಲ. ಹೀಗಾಗಿ ಸ್ಥಳೀಯ ನಾಯಕರು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದು ಇದಕ್ಕೆ ವಿಶೇಷ ಮಹತ್ವ ನೀಡುವ ಅಗತ್ಯವಿಲ್ಲ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

‘ಮೀಸಲಾತಿ ಪ್ರಕಾರ ನಮ್ಮ ಪಕ್ಷದಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಅರ್ಹರಾದ ಅಭ್ಯರ್ಥಿಗಳು ಇರಲಿಲ್ಲ. ಹೀಗಾಗಿ ನಮಗೆ ಅಧ್ಯಕ್ಷ ಸ್ಥಾನ ನೀಡಿ, ಉಪಾಧ್ಯಕ್ಷ ಸ್ಥಾನವನ್ನು ನೀವು (ಕಾಂಗ್ರೆಸ್) ಪಡೆಯಿರಿ ಎಂದು ಕೇಳಿದ್ದೇವು. ಆದರೆ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನ ಎರಡೂ ನಮಗೇಬೇಕು ಎಂದು ಕಾಂಗ್ರೆಸ್‌ನವರು ಹಠ ಹಿಡಿದರು. ಇದರಿಂದಾಗಿ ಹೊಂದಾಣಿಕೆ ಸಾಧ್ಯವಾಗಲಿಲ್ಲ’ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

‘ಕಾಂಗ್ರೆಸ್‌ನೊಂದಿಗೆ ಹೊಂದಾಣಿಕೆಗೆ ಆದ್ಯತೆ ನೀಡಿ ಎಂದು ನಮ್ಮ ಪಕ್ಷದ ಸ್ಥಳೀಯ ನಾಯಕರಿಗೆ ಸೂಚಿಸಲಾಗಿತ್ತು. ಆದರೆ ಕಾಂಗ್ರೆಸ್‌ನವರ ಸಹಕಾರ ಸಿಗದ ಕಾರಣ ಸ್ಥಳೀಯ ನಾಯಕರು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಇದು ಕೇವಲ ಸ್ಥಳೀಯ ಮಟ್ಟದ ಮೈತ್ರಿಯಾಗಿದ್ದು, ಬಿಜೆಪಿಯೊಂದಿಗಿನ ನಮ್ಮ ಹೋರಾಟ ಮುಂದುವರಿಯುತ್ತದೆ’ ಎಂದು ಸ್ಪಷ್ಟಪಡಿಸಿದರು.

ADVERTISEMENT

ಈ ಬಗ್ಗೆ ಕಾಂಗ್ರೆಸ್‌ನವರು ಅಪಪ್ರಚಾರ ಮಾಡುವ ಅಗತ್ಯವಿಲ್ಲ. ಕೊಪ್ಪಳದಲ್ಲಿ ಬಿಜೆಪಿ ಅಧ್ಯಕ್ಷ ಸ್ಥಾನ, ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನವನ್ನು ಹಂಚಿಕೊಂಡಿವೆ. ಅವರ ಹಾಗೆ ನಾವು ಟೀಕೆ ಮಾಡಲು ಹೋಗಲಿಲ್ಲ. ಮೈಸೂರು ಜಿಲ್ಲಾ ಪಂಚಾಯಿತಿಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬಾರದ ಕಾರಣ ಹೊಂದಾಣಿಕೆ ಅನಿವಾರ್ಯವಾಗಿತ್ತು ಎಂದು ಸಮರ್ಥಿಸಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.