ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದಾರೆ.
ತಮ್ಮ ತಂದೆ ಪ್ರತಿನಿಧಿಸುತ್ತಿರುವ ಮೈಸೂರು ಜಿಲ್ಲೆಯ ವರುಣಾ ವಿಧಾನ ಸಭಾ ಕ್ಷೇತ್ರದಲ್ಲಿ 34ರ ಹರೆಯದ ಯತೀಂದ್ರ ಪಕ್ಷದ ಸದಸ್ಯತ್ವ ಪಡೆದುಕೊಂಡಿದ್ದಾರೆ. ಆ ಮೂಲಕ ಮುಂದಿನ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಅವರ ಸಕ್ರಿಯ ರಾಜಕೀಯ ಪ್ರವೇಶ ಖಚಿತಗೊಂಡಿದೆ.
‘ಯತೀಂದ್ರ ಎರಡು ತಿಂಗಳ ಹಿಂದೆಯೇ ಪಕ್ಷದ ಸದಸ್ಯತ್ವ ತೆಗೆದುಕೊಂಡಿದ್ದಾರೆ. ಆದರೆ, ಅವರಿಗೆ ಪಕ್ಷದಲ್ಲಿ ಯಾವುದೇ ಸ್ಥಾನ ನೀಡಿಲ್ಲ’ ಎಂದು ಮೈಸೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ. ವಿಜಯಕುಮಾರ್ ತಿಳಿಸಿದರು. ಈ ವಿಷಯವನ್ನು ರಾಜ್ಯ ಕಾಂಗ್ರೆಸ್ ಘಟಕ ರಹಸ್ಯವಾಗಿ ಇಟ್ಟಿದೆ.
ಮುಂದಿನ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಯತೀಂದ್ರ ಕಣಕ್ಕಿಳಿಯುವ ಕುರಿತು ಊಹಾಪೋಹ ಹರಡಿದೆ. ಸಿದ್ದರಾಮಯ್ಯ ಮತ್ತೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಒಂದು ವರ್ಷದಿಂದ ವರುಣಾ ಕ್ಷೇತ್ರದಲ್ಲಿ ಯತೀಂದ್ರ ಸುತ್ತಾಡುತ್ತಿದ್ದಾರೆ. ಅಲ್ಲದೆ, ಅವರನ್ನು ಈ ಕ್ಷೇತ್ರದ ಜಾಗೃತಿ ಸಮಿತಿ ಅಧ್ಯಕ್ಷರಾಗಿ ಸರ್ಕಾರ ಇತ್ತೀಚೆಗೆ ನೇಮಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.