ಚಿಕ್ಕಬಳ್ಳಾಪುರ: ‘ಇನ್ನಾದರೂ ಕಾಂಗ್ರೆಸ್ ನಾಯಕರು ಆತ್ಮ ವಿಮರ್ಶೆ ಮಾಡಿಕೊಂಡು ಪಕ್ಷದ ಯುವ ನಾಯಕರಿಗೆ ಸ್ಥಾನಮಾನ ನೀಡಬೇಕು. ಆಗಲೇ ಪಕ್ಷಕ್ಕೆ ಗೌರವ. ಇಲ್ಲವಾದರೆ ಕಾಂಗ್ರೆಸ್ ಸರ್ಕಾರಕ್ಕೆ ಆಪತ್ತು ತಪ್ಪಿದಲ್ಲ’ ಎಂದು ಶಾಸಕ ಡಾ.ಕೆ.ಸುಧಾಕರ್ ಹೇಳಿದರು.
ನಗರದಲ್ಲಿ ಬುಧವಾರ ಆಯೋಜಿಸಿದ್ದ ಮತದಾರರಿಗೆ ಕೃತಜ್ಞತೆ ಸಮಾರಂಭದಲ್ಲಿ ಮಾತನಾಡಿದ ಅವರು, ‘ಕೇಂದ್ರ ಸಚಿವರಾಗಿದ್ದವರು ತನ್ನ ಮಗನಿಗೆ ಮಂತ್ರಿ ಮಾಡುವುದು ದೊಡ್ಡತನವಲ್ಲ. ಸಚಿವ ಸ್ಥಾನ ತಂದೆ, ತಾತನ ಸ್ಥಾನಮಾನ ನೋಡಿ ಕೊಡುವುದಲ್ಲ. ಯುವ ನಾಯಕರ ಸಾಮರ್ಥ್ಯ, ಸೇವಾ ಮನೋಭಾವ ನೋಡಿ ಕೊಡಬೇಕು’ ಎಂದು ಅಭಿಪ್ರಾಯಪಟ್ಟರು.
‘ಈಗಾಗಲೇ ದೇಶದಲ್ಲಿ ಪಂಜಾಬ್ ಬಿಟ್ಟು ಎಲ್ಲ ಕಡೆ ಕೇಸರಿಮಯವಾಗುತ್ತಿದೆ. ಕೇಂದ್ರ ಸರ್ಕಾರದಲ್ಲಿ ಯುವಕರಿಗೆ ಹೆಚ್ಚಿನ ಅವಕಾಶ ಕಲ್ಪಿಸುತ್ತಿರುವುದೇ ಇದಕ್ಕೆ ಕಾರಣ. ಆದರೆ ಇವತ್ತು ಕಾಂಗ್ರೆಸ್ ಪಕ್ಷ ಹೀನಾಯ ಸ್ಥಿತಿ ತಲುಪಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸ್ಥಿತಿ ಏನಾಗಬಹುದು ಎಂದು ಕಾಂಗ್ರೆಸ್ ಹಿರಿಯ ನಾಯಕರು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.
‘ಅರ್ಹತೆಗೆ ಅನುಗುಣವಾಗಿ ಸಚಿವರಾಗಿರುವವರ ಬಗ್ಗೆ ನಾನು ಮಾತನಾಡುವುದಿಲ್ಲ. ಪಕ್ಷ ಪ್ರಬಲವಾಗಿ ಬೆಳೆಯಬೇಕಾದರೆ ಯುವ ನಾಯಕರ ಪಾತ್ರ ಹೆಚ್ಚಿದೆ. ಕಾಂಗ್ರೆಸ್ ಇದನ್ನು ಗಂಭೀರವಾಗಿ ಅರ್ಥ ಮಾಡಿಕೊಂಡು ಮುನ್ನೆಚ್ಚರಿಕೆಯಾಗಿ ಯುವಕರಿಗೆ ಮಣೆ ಹಾಕಬೇಕು’ ಎಂದು ಎಚ್ಚರಿಕೆ ನೀಡಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಸುಧಾಕರ್ ಅವರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ಸದ್ಯ ಕಾಂಗ್ರೆಸ್ ಅತೃಪ್ತರ ಗುಂಪಿನೊಂದಿಗೆ ಗುರುತಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.