ADVERTISEMENT

ಕಾಂಗ್ರೆಸ್‌ 78 ಸ್ಥಾನ ಪಡೆಯುವಲ್ಲಿ ಸಿದ್ದರಾಮಯ್ಯ ಅವರ ಶ್ರಮವಿದೆ: ಶೋಭಾ ಕರಂದ್ಲಾಜೆ

​ಪ್ರಜಾವಾಣಿ ವಾರ್ತೆ
Published 27 ಮೇ 2018, 14:47 IST
Last Updated 27 ಮೇ 2018, 14:47 IST
ಸಂಸದೆ ಶೋಭಾ ಕರಂದ್ಲಾಜೆ
ಸಂಸದೆ ಶೋಭಾ ಕರಂದ್ಲಾಜೆ   

ಉಡುಪಿ: ‘ಕಾಂಗ್ರೆಸ್‌ ಹೈಕಮಾಂಡ್‌ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಹತ್ತಿರವಾಗಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಡವಾಗಿದ್ದಾರೆ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಭಾನುವಾರ ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಕಾಂಗ್ರೆಸ್‌ 78 ಸ್ಥಾನಗಳನ್ನು ಪಡೆಯುವಲ್ಲಿ ಸಿದ್ದರಾಮಯ್ಯ ಅವರ ಶ್ರಮವಿದೆ. ಅಲ್ಪಸಂಖ್ಯಾತರು ಹಾಗೂ ಕುರುಬರ ಮತಗಳನ್ನು ಒಟ್ಟು ಮಾಡಿದ ಪರಿಣಾಮ ಕಾಂಗ್ರೆಸ್‌ ಹೆಚ್ಚು ಸ್ಥಾನಗಳನ್ನು ಪಡೆಯಲು ಸಾಧ್ಯವಾಯಿತು. ಇಲ್ಲಿಯವರೆಗೂ ಸಿದ್ದರಾಮಯ್ಯ ಅವರನ್ನು ತಲೆಯ ಮೇಲೆ ಹೊತ್ತು ತಿರುಗುತ್ತಿದ್ದ ಹೈಕಮಾಂಡ್, ಈಗ ಕೆಳಗೆ ಬಿಸಾಡಿದೆ’ ಎಂದರು.

‘ಉಪಯೋಗಿಸಿ ಬಿಸಾಡುವಂತಹ ಮನಸ್ಥಿತಿಯನ್ನು ಕಾಂಗ್ರೆಸ್‌ ಹೊಂದಿದೆ. ಸರ್ಕಾರದ ಎಲ್ಲ ವ್ಯವಹಾರಗಳು ಪದ್ಮನಾಭನಗರ ಹಾಗೂ ದೆಹಲಿಗೆ ವರ್ಗಾವಣೆಯಾಗಿವೆ’ ಎಂದು ವ್ಯಂಗ್ಯವಾಡಿದರು.

ADVERTISEMENT

‘ರಾಷ್ಟ್ರೀಯ ಪಕ್ಷವಾಗಿರುವ ಕಾಂಗ್ರೆಸ್‌ಗೆ, ರಾಜ್ಯದ ನಾಯಕರನ್ನು ಹೇಗೆ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎನ್ನುವ ಸಾಮಾನ್ಯ ಪ್ರಜ್ಞೆಯೂ ಇಲ್ಲ. ಕುರುಬರ ಮತ ಪಡೆಯಲು, ವೋಟ್‌ ಬ್ಯಾಂಕ್‌ ರಾಜಕಾರಣ ಮಾಡಲು ಸಿದ್ದರಾಮಯ್ಯ ಬೇಕಿತ್ತು. ಅಧಿಕಾರ ನೀಡಲು ಮಾತ್ರ ಬೇಡವಾಗಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.