ADVERTISEMENT

ಕಾರಿಗೆ ಬಸ್ ಡಿಕ್ಕಿ: 6 ಮಂದಿ ಸಾವು

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2011, 19:30 IST
Last Updated 5 ಸೆಪ್ಟೆಂಬರ್ 2011, 19:30 IST

ಹಾಸನ: ಸೋಮವಾರ ನಸುಕಿನ 3.15ರ ಸುಮಾರಿಗೆ ಹಾಸನ ಹೊರವಲಯದ ಕೆಂಚಟ್ಟಹಳ್ಳಿಯ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಬ್ಬರು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.

ಮೃತಪಟ್ಟವರೆಲ್ಲ ಚಿಕ್ಕಮಗಳೂರಿನ ಶರೀಫ್ ಕಾಲೋನಿಯ ನಿವಾಸಿಗಳಾಗಿದ್ದು, ಮಾರುತಿ 800 ಕಾರಿನಲ್ಲಿ ಬೆಂಗಳೂರಿನಿಂದ ಚಿಕ್ಕಮಗಳೂರಿನತ್ತ ಹೊರಟಿದ್ದರು.  ಇಲ್ಲಿನ ವಿಧಾತಾ ಡಾಬಾದ ಸಮೀಪ ಬಂದಾಗ ಹಿಂದಿನಿಂದ ವೇಗವಾಗಿ ಬಂದ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಘಟನೆಯಲ್ಲಿ ಕಾರು ಓಡಿಸುತ್ತಿದ್ದ ಇಸ್ರಾರ್ (24), ಶಬನಂ (17), ಜುನೇದ್ (12), ವಾಸಿಂ (22), ರೆಹಮಾನ್ (24) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಲೆಗೆ ತೀವ್ರ ಪೆಟ್ಟು ಬಿದ್ದಿರುವ ಇಮ್ರಾನ್ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರೂ ಮೃತಪಟ್ಟಿದ್ದಾರೆ.

ಕಾರಿನಲ್ಲಿದ್ದ ಮಹಿಳೆ ಹೀರಾನಾಜ್ ಪವಾಡ ಸದೃಶವಾಗಿ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಇವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರಲ್ಲಿ ಶಬನಂ ಹಾಗೂ ಜುನೇದ್ ಎಂಬುವವರು ಹೀರಾನಾಜ್ ಮಕ್ಕಳು. ಅಪಘಾತದ ರಭಸಕ್ಕೆ ಮಾರುತಿ 800 ಕಾರು ನಜ್ಜುಗುಜ್ಜಾಗಿದೆ. ಕಾರಿನೊಳಗೆ ಸಿಲುಕಿದ್ದ ದೇಹಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸ ಪಟ್ಟರು. ಹಾಸನ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.