ADVERTISEMENT

ಕಾವೇರಿ ನೀರು ಬಿಡಲಾಗದು

ಕೇಂದ್ರದ ತಂಡಕ್ಕೆ ರಾಜ್ಯದ ಸಂಕಷ್ಟ ಮನವರಿಕೆ ಮಾಡಿದ ಸರ್ಕಾರ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2016, 19:32 IST
Last Updated 7 ಅಕ್ಟೋಬರ್ 2016, 19:32 IST
ಕಾವೇರಿ ಕೊಳ್ಳದ ಜಲಾಶಯಗಳ ಸ್ಥಿತಿಗತಿ ಕುರಿತು ಅಧ್ಯಯನ ನಡೆಸಲಿರುವ ಉನ್ನತ ತಾಂತ್ರಿಕ ಸಮಿತಿ ಮುಖ್ಯಸ್ಥ, ಕೇಂದ್ರ ಜಲ ಆಯೋಗದ ಅಧ್ಯಕ್ಷ ಜಿ.ಎಸ್‌. ಝಾ ಅವರನ್ನು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಶ್ಚಂದ್ರ ಕುಂಟಿಯಾ ಇದ್ದರು  –ಪ್ರಜಾವಾಣಿ ಚಿತ್ರ
ಕಾವೇರಿ ಕೊಳ್ಳದ ಜಲಾಶಯಗಳ ಸ್ಥಿತಿಗತಿ ಕುರಿತು ಅಧ್ಯಯನ ನಡೆಸಲಿರುವ ಉನ್ನತ ತಾಂತ್ರಿಕ ಸಮಿತಿ ಮುಖ್ಯಸ್ಥ, ಕೇಂದ್ರ ಜಲ ಆಯೋಗದ ಅಧ್ಯಕ್ಷ ಜಿ.ಎಸ್‌. ಝಾ ಅವರನ್ನು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಶ್ಚಂದ್ರ ಕುಂಟಿಯಾ ಇದ್ದರು –ಪ್ರಜಾವಾಣಿ ಚಿತ್ರ   

ಬೆಂಗಳೂರು: ತೀವ್ರ ಮಳೆ ಕೊರತೆಯಿಂದಾಗಿ ಕಾವೇರಿಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲದೇ  ಇರುವ ಅಸಹಾಯಕ ಪರಿಸ್ಥಿತಿಯನ್ನು ಕೇಂದ್ರದ ಅಧ್ಯಯನ ತಂಡದ ಮುಂದೆ  ವಿವರಿಸಿರುವ ರಾಜ್ಯ ಸರ್ಕಾರ, ನಾಡಿನ ಸಂಕಷ್ಟವನ್ನು ಮನವರಿಕೆ ಮಾಡಿಕೊಟ್ಟಿದೆ.

ಸುಪ್ರೀಂಕೋರ್ಟ್‌ ಸೂಚನೆ ಮೇರೆಗೆ ಕಾವೇರಿ ಕೊಳ್ಳದ ಜಲಾಶಯಗಳ ಸ್ಥಿತಿ ಅಧ್ಯಯನ ನಡೆಸಲು ಕೇಂದ್ರ ಜಲ ಆಯೋಗದ ಅಧ್ಯಕ್ಷ ಜಿ.ಎಸ್‌. ಝಾ ನೇತೃತ್ವದ  ಸಮಿತಿ ಎರಡು ದಿನ ರಾಜ್ಯ ಪ್ರವಾಸ ಕೈಗೊಂಡಿದೆ. ವಿಧಾನಸೌಧದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ವಿಡಿಯೊ ದೃಶ್ಯಗಳು, ಅಂಕಿ ಅಂಶಗಳ ಮೂಲಕ ರಾಜ್ಯದ ಕಷ್ಟವನ್ನು ಸಮಿತಿ ಮುಂದೆ ವಿವರಿಸಲಾಯಿತು. ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಅವರು ಸಮಗ್ರ ಮಾಹಿತಿ ಇರುವ  ಮನವಿಯನ್ನು  ಇದೇ ಸಂದರ್ಭದಲ್ಲಿ ಸಲ್ಲಿಸಿದರು.

ನೈರುತ್ಯ ಮುಂಗಾರು ಅವಧಿಯಲ್ಲಿ ಕೆಆರ್‌ಎಸ್‌ ಅಚ್ಚುಕಟ್ಟು ಪ್ರದೇಶದಲ್ಲಿ ಶೇ 34 ಮತ್ತು ಕಬಿನಿ ಅಚ್ಚುಕಟ್ಟು ಪ್ರದೇಶದಲ್ಲಿ ಶೇ 47ರಷ್ಟು ಮಳೆ ಕೊರತೆಯಾಗಿದೆ. ಕೆಆರ್‌ಎಸ್‌ನಲ್ಲಿ 42 ವರ್ಷಗಳಲ್ಲಿ ಎರಡನೇ ಬಾರಿಗೆ ಅತಿ ಕಡಿಮೆ ನೀರಿನ ಸಂಗ್ರಹವಾಗಿದೆ.

41 ವರ್ಷಗಳ ಸರಾಸರಿ ಗಮನಿಸಿದರೆ ಮುಂಗಾರು ಅವಧಿಯಲ್ಲಿ ಕಾವೇರಿ ಕೊಳ್ಳದ ನಾಲ್ಕೂ ಜಲಾಶಯಗಳಿಗೆ 257 ಟಿಎಂಸಿ ಅಡಿಗಳಷ್ಟು ನೀರು ಹರಿದು ಬರಬೇಕಿತ್ತು. ಆದರೆ, ಈ ಬಾರಿ ಕೇವಲ 131.51 ಟಿಎಂಸಿ ಅಡಿ ಸಂಗ್ರಹವಾಗಿದ್ದು, ಶೇ 51.2 ರಷ್ಟು ನೀರಿನ ಕೊರತೆ ಇದೆ ಎಂದು ಕೇಂದ್ರದ ತಂಡಕ್ಕೆ ವಿವರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.