ನವದೆಹಲಿ: ಬೂದಿ ಮುಚ್ಚಿದ ಕೆಂಡದಂತಿರುವ ಬಂಡಾಯ ಶಮನಗೊಳಿಸಲು ಮತ್ತೊಂದು ಹಂತದ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ, ಬಜೆಟ್ ಮಂಡನೆ ವಿಷಯದ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಅವರನ್ನು ಸೋಮವಾರ ಭೇಟಿ ಮಾಡಿ ಮಾತುಕತೆ ನಡೆಸಿದರು.
ರಾಜ್ಯದಲ್ಲಿ ಸುಭದ್ರ ಸಮ್ಮಿಶ್ರ ಸರ್ಕಾರ ನಡೆಸುವ ಸಂಬಂಧ ಪರಸ್ಪರ ಅನುಸರಿಸಬೇಕಾದ ಕ್ರಮಗಳ ವಿನಿಮಯ ಮಾಡಿಕೊಂಡರು. ಸಂಪುಟ ವಿಸ್ತರಣೆಯ ಸಂಬಂಧವೂ ಗಂಭೀರ ಚರ್ಚೆ ನಡೆಸಿದರು. ಅಲ್ಲದೆ, ಸಂಪುಟ ವಿಸ್ತರಣೆಯಲ್ಲಿ ಎದುರಾಗಬಹುದಾದ ಸಮಸ್ಯೆಗಳ ಬಗ್ಗೆ ರಾಹುಲ್ಗಾಂಧಿ ಅವರ ಗಮನ ಸೆಳೆದಿದ್ದಾರೆ.
ಬಜೆಟ್ ಮಂಡನೆ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪೂರಕ ಬಜೆಟ್ ಮಂಡಿಸಿದರೆ ಸಾಕು ಎಂದು ನೀಡಿರುವ ಹೇಳಿಕೆ ಬಗ್ಗೆಯೂ ಕೂಡ ಪ್ರಸ್ತಾಪಿಸಿದ್ದಾರೆ.
ಹೊಸ ಸರ್ಕಾರ ಅಸ್ಥಿತ್ವಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಉಭಯ ಪಕ್ಷಗಳ ಪ್ರಣಾಳಿಕೆ ಅಂಶಗಳನ್ನೊಳಗೊಂಡ ಹೊಸದಾದ ಪೂರ್ಣ ಪ್ರಮಾಣದ ಬಜೆಟ್ ಮಂಡಿಸುವ ಅವಶ್ಯಕತೆ ಇದೆ ಎಂಬುದನ್ನು ರಾಹುಲ್ಗಾಂಧಿ ಗಮನಕ್ಕೆ ತಂದಿದ್ದಾರೆ.
ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ರಾಹುಲ್ಗಾಂಧಿ ಅವರಲ್ಲಿ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.