ADVERTISEMENT

ಕೆಜೆಪಿ ಶಾಸಕರಿಗೆ ಪ್ರತ್ಯೇಕ ಆಸನಕ್ಕೆ ಓಲೇಕಾರ ಮನವಿ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2012, 19:39 IST
Last Updated 5 ಡಿಸೆಂಬರ್ 2012, 19:39 IST

ಸುವರ್ಣ ವಿಧಾನಸೌಧ (ಬೆಳಗಾವಿ): ಹಾವೇರಿಯಲ್ಲಿ ಭಾನುವಾರ ನಡೆಯುವ ಕರ್ನಾಟಕ ಜನತಾ ಪಕ್ಷದ ಸಮಾವೇಶದಲ್ಲಿ ಪಾಲ್ಗೊಳ್ಳುವ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ಮುಂದಾದರೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಬಲಿಗರಿಗೆ ವಿಧಾನಸಭೆಯಲ್ಲಿ ಪ್ರತ್ಯೇಕ ಆಸನ ಒದಗಿಸುವಂತೆ ಮನವಿ ಮಾಡಲಾಗುವುದು ಎಂದು ಬಿಜೆಪಿ ಶಾಸಕ ನೆಹರೂ ಓಲೇಕಾರ್ ಹೇಳಿದರು.

ವಿಧಾನಮಂಡಲ ಅಧಿವೇಶನಕ್ಕೂ ಮುನ್ನ ಸುವರ್ಣ ವಿಧಾನಸೌಧದ ಮೊಗಸಾಲೆಯಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, `ಸಚಿವರು, ಶಾಸಕರು ಮತ್ತು ಸಂಸದರು ಸಮಾವೇಶಕ್ಕೆ ಬರುವುದು ಬೇಡ ಎಂಬ ಇಂಗಿತವನ್ನು ಯಡಿಯೂರಪ್ಪ ಅವರೇ ವ್ಯಕ್ತಪಸಿದ್ದಾರೆ. ಆದರೂ, ಕೆಲ ಸಚಿವರು, ಶಾಸಕರು ಸಮಾವೇಶದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ' ಎಂದರು.

`ಕೆಜೆಪಿ ಸಮಾವೇಶದಲ್ಲಿ ಭಾಗಿಯಾಗುವ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಪದೇ ಪದೇ ಹೇಳುತ್ತಿದ್ದಾರೆ. ಅವರು ಕ್ರಮ ಕೈಗೊಳ್ಳುವುದೇ ಆದಲ್ಲಿ ನಮಗೆ ವಿಧಾನಸಭೆಯಲ್ಲಿ ಪ್ರತ್ಯೇಕ ಆಸನಗಳನ್ನು ಒದಗಿಸಲಿ. ನಂತರ ಕ್ರಮದ ಬಗ್ಗೆ ಮಾತನಾಡಲಿ' ಎಂದು ಸವಾಲು ಹಾಕಿದರು.

ಭಾನುವಾರ ಬೆಳಿಗ್ಗೆ ಹಾವೇರಿಯಲ್ಲಿ ಯಡಿಯೂರಪ್ಪ ಬೆಂಬಲಿಗರಿಗೆ ಉಪಾಹಾರ ಕೂಟ ಏರ್ಪಡಿಸಲಾಗಿದೆ. 50ಕ್ಕೂ ಹೆಚ್ಚು ಬಿಜೆಪಿ ಶಾಸಕರು, 11 ಸಚಿವರು ಮತ್ತು ಒಂಬತ್ತು ಸಂಸದರು ಉಪಾಹಾರ ಕೂಟದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು.

ಅದ್ದೂರಿ ಸಿದ್ಧತೆ: ಕೆಜೆಪಿ ಸಮಾವೇಶಕ್ಕಾಗಿ ಹಾವೇರಿಯಲ್ಲಿ ಭಾರಿ ಸಿದ್ಧತೆ ಮಾಡಲಾಗಿದೆ. 5 ಲಕ್ಷ ಜನರು ಸಮಾವೇಶಕ್ಕೆ ಆಗಮಿಸುವ ನಿರೀಕ್ಷೆ ಇದ್ದು, ಅತ್ಯಂತ ದೊಡ್ಡ ಸಭಾಂಗಣ ನಿರ್ಮಿಸಲಾಗುತ್ತಿದೆ. ಸಮಾವೇಶಕ್ಕೆ ಬರುವ ಎಲ್ಲರಿಗೂ ಊಟದ ಸಿದ್ಧತೆ ಮಾಡಿಕೊಂಡು ಬರುವಂತೆ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.