ಬೆಂಗಳೂರು: 362 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸಿದ ಸಂದರ್ಶನದಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ಆರೋಪ ಕುರಿತು ಪ್ರಾಥಮಿಕ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಿಬಿಐ ಅಥವಾ ಸಿಐಡಿ ಪೊಲೀಸರನ್ನು ಕೋರಲು ರಾಜ್ಯ ಸರ್ಕಾರ ಮುಂದಾಗಿದೆ. ಒಂದೆರಡು ದಿನಗಳಲ್ಲಿ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.
ಕೆಪಿಎಸ್ಸಿ ಸಂದರ್ಶನದ ಕುರಿತು ಕೇಳಿಬಂದಿರುವ ಆರೋಪಗಳ ಬಗ್ಗೆ ಯಾವ ರೀತಿಯ ಕ್ರಮ ಕೈಗೊಳ್ಳಬಹುದು ಎಂಬುದನ್ನು ಪರಿಶೀಲಿಸಿ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಡ್ವೊಕೇಟ್ ಜನರಲ್ (ಎ.ಜಿ) ಪ್ರೊ.ರವಿವರ್ಮ ಕುಮಾರ್ ಅವರನ್ನು ಕೋರಿದ್ದರು. ಎ.ಜಿಯವರು ಈಗಾಗಲೇ ವರದಿ ಸಲ್ಲಿಸಿದ್ದು, ಕೆಪಿಎಸ್ಸಿ ಸದಸ್ಯರ ವಿರುದ್ಧದ ಆರೋಪಗಳ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿದ ಬಳಿಕವೇ ಮುಂದಿನ ನಿರ್ಧಾರಕ್ಕೆ ಬರುವಂತೆ ಶಿಫಾರಸು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಪ್ರಕರಣ ಕುರಿತು ಗುರುವಾರ ವಿಧಾನಮಂಡಲದಲ್ಲಿ ಹೇಳಿಕೆ ನೀಡಿದ್ದ ಮುಖ್ಯಮಂತ್ರಿಯವರು, ಶೀಘ್ರದಲ್ಲಿ ತನಿಖೆಗೆ ಆದೇಶಿಸುವುದಾಗಿ ಪ್ರಕಟಿಸಿದ್ದರು. ಮೂರು ವಾರದೊಳಗೆ ತನಿಖೆ ಪೂರ್ಣಗೊಳಿಸಿ, ಮುಂದಿನ ಕ್ರಮ ಜರುಗಿಸುವುದಾಗಿ ತಿಳಿಸಿದ್ದರು. ಪೊಲೀಸ್ ತನಿಖಾ ಸಂಸ್ಥೆಯಿಂದ ಮಾತ್ರವೇ ಸಂದರ್ಶನ ಪ್ರಕ್ರಿಯೆಯಲ್ಲಿನ ಎಲ್ಲ ಬೆಳವಣಿಗೆಗಳ ಕುರಿತು ಪ್ರಾಥಮಿಕ ತನಿಖೆ ನಡೆಸಲು ಸಾಧ್ಯ ಎಂಬ ಅಭಿಪ್ರಾಯಕ್ಕೆ ಸರ್ಕಾರ ಬಂದಿದೆ.
ಆಯೋಗವು ಕಳುಹಿಸುವ ನೇಮಕಾತಿ ಪಟ್ಟಿಯನ್ನು ತಡೆ ಹಿಡಿಯುವ ಅಧಿಕಾರ ಮುಖ್ಯಮಂತ್ರಿಯವರಿಗೆ ಇದೆ. ಆಯೋಗದ ಸದಸ್ಯರೇ ಖುದ್ದಾಗಿ ಕರೆಮಾಡಿ ಹಣ ಕೇಳಿದ್ದರು ಎಂದು ಸಂದರ್ಶನಕ್ಕೆ ಹಾಜರಾಗಿದ್ದ ಕೆಲವು ಅಭ್ಯರ್ಥಿಗಳು ಮಾಡಿರುವ ಆರೋಪದ ಕುರಿತು ಹೆಚ್ಚಿನ ತನಿಖೆ ನಡೆಸಲು ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.
ಆಯೋಗದ ಹಾಲಿ ಸದಸ್ಯರ ವಿರುದ್ಧ ಪೂರ್ಣ ಪ್ರಮಾಣದ ತನಿಖೆಗೂ ಮುನ್ನ ಆರೋಪಗಳಲ್ಲಿನ ಸತ್ಯಾಸತ್ಯತೆ ಕುರಿತು ಪ್ರಾಥಮಿಕ ತನಿಖೆ ನಡೆಸಬೇಕಿದೆ. ಬಳಿಕ ವರದಿಯನ್ನು ರಾಜ್ಯಪಾಲರ ಮೂಲಕ ರಾಷ್ಟ್ರಪತಿಯವರಿಗೆ ಕಳುಹಿಸಬೇಕಿದೆ. ರಾಷ್ಟ್ರಪತಿಯವರು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿವರಿಗೆ ಈ ಪ್ರಸ್ತಾವ ಕಳುಹಿಸಬೇಕು. ನಂತರ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ತನಿಖೆಗೆ ಆದೇಶ ಹೊರಡಿಸಬೇಕಾಗುತ್ತದೆ.
ಪ್ರಸ್ತಾವ ಸಿದ್ಧ: ಎ.ಜಿಯವರ ಅಭಿಪ್ರಾಯವನ್ನು ಆಧರಿಸಿ ಪ್ರಾಥಮಿಕ ತನಿಖೆಗೆ ಆದೇಶಿಸುವ ಸಂಬಂಧ ಕಾನೂನು ಇಲಾಖೆ ಪ್ರಸ್ತಾವವನ್ನು ಸಿದ್ಧಪಡಿಸಿದೆ. ಮುಖ್ಯ ಕಾರ್ಯದರ್ಶಿಯವರು ಅದನ್ನು ಪರಿಶೀಲಿಸಿ ಮುಖ್ಯಮಂತ್ರಿಯವರಿಗೆ ರವಾನಿಸಿದ್ದಾರೆ.
ಮುಖ್ಯಮಂತ್ರಿ ಅನುಮೋದನೆ ನೀಡಿದ ಬಳಿಕ ಪ್ರಾಥಮಿಕ ತನಿಖೆಗೆ ಸಂಬಂಧಿಸಿದ ಆದೇಶ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.