ಬೆಂಗಳೂರು: ಗೆಜೆಟೆಡ್ ಪ್ರೊಬೇಷನರ್ಸ್ ಅಕ್ರಮ ನೇಮಕಾತಿ ಪ್ರಕರಣದ ಪ್ರಮುಖ ಆರೋಪಿ ರಾಜ್ಯ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ್ಯ ಎಚ್.ಎನ್.ಕೃಷ್ಣ ಅವರನ್ನು ಸಿಐಡಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಆರೋಪಿಯನ್ನು ನಗರದ ಎಂಟನೇ ಎಸಿಎಂಎಂ ನ್ಯಾಯಾಲಯಕ್ಕೆ ಮಧ್ಯಾಹ್ನ ಹಾಜರುಪಡಿಸಲಾಯಿತು. ಸೋಮವಾರ (ಅ.10) ಕೃಷ್ಣ ಅವರ ದತ್ತು ಪುತ್ರಿಯ ವಿವಾಹ ಸಮಾರಂಭ ಇರುವುದರಿಂದ ಜಾಮೀನು ನೀಡಬೇಕೆಂದು ಆರೋಪಿ ಪರ ವಕೀಲರು ಮಾಡಿದ ಮನವಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು ಅ.12ರವರೆಗೆ ಮಧ್ಯಂತರ ಜಾಮೀನು ನೀಡಿ ಆದೇಶಿಸಿದರು.
ಅ.12ರಂದು ಕೃಷ್ಣ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಆರೋಪಿಗೆ ಜಾಮೀನು ನೀಡದಂತೆ ಮತ್ತು ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಸಿಐಡಿ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡುವ ಸಾಧ್ಯತೆ ಇದೆ.
1998, 1999 ಮತ್ತು 2004ರಲ್ಲಿ ನಡೆದಿದ್ದ ಗೆಜೆಟೆಡ್ ಪ್ರೊಬೇಷನರ್ಸ್ (ಗ್ರೂಪ್ ಎ ಮತ್ತು ಬಿ) ನೇಮಕಾತಿಯಲ್ಲಿ ಅಕ್ರಮ ಎಸಗಲಾಗಿದೆ ಎಂಬ ಆರೋಪ ಕೃಷ್ಣ ಅವರ ವಿರುದ್ಧ ಕೇಳಿ ಬಂದಿತ್ತು. ಈ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕಲೀಲ್ ಅಹಮ್ಮದ್ ಮತ್ತಿತರರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.