ಧಾರವಾಡ: ಮಾ.19ರಂದು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಲಿಂಗಾಯತ ಸ್ವತಂತ್ರ ಧರ್ಮದ ಬಗ್ಗೆ ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿ ಸಲ್ಲಿಸಿರುವ ವರದಿಯನ್ನು ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಗದುಗಿನ ತೋಂಟದಾರ್ಯ ಮಠದ ಡಾ.ಸಿದ್ಧಲಿಂಗ ಸ್ವಾಮೀಜಿ ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ವಿಶ್ವಾಸವಿದ್ದು, ಲಿಂಗಾಯತ ಸ್ವತಂತ್ರ ಧರ್ಮದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡುವ ಭರವಸೆಯಿದೆ. ಈ ವರದಿ ಕೇಂದ್ರಕ್ಕೆ ಸಲ್ಲಿಕೆಯಾಗದಿದ್ದರೆ, ಸ್ವತಂತ್ರ ಧರ್ಮದ ಹೋರಾಟ ಮುಂದುವರಿಸುವುದಾಗಿ ಹೇಳಿದರು.
‘ಲಿಂಗಾಯತ ಸ್ವತಂತ್ರ ಧರ್ಮವನ್ನು ವಿರೋಧಿಸುತ್ತಿರುವ ಪಂಚಾಚಾರ್ಯರು ವಿಘ್ನ ಸಂತೋಷಿಗಳು. ಬಸವಣ್ಣನ ಕಾಲದಲ್ಲೂ ಇಂಥ ಸಂಘರ್ಷವಿತ್ತು. ಅವರ ಹೋರಾಟವನ್ನು ಇಂಥವರೇ ವಿಫಲಗೊಳಿಸಿದರು. ಈಗಲೂ ಸಹ ಅಡ್ಡಿ ಉಂಟು ಮಾಡುತ್ತಿದ್ದಾರೆ’ ಎಂದರು.
ಲಿಂಗಾಯತರಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಕುರಿತು ಸಂಶೋಧಕ ಡಾ.ಎಂ. ಚಿದಾನಂದಮೂರ್ತಿ ನೀಡಿರುವ ಹೇಳಿಕೆಗೆ ಅಳಬೇಕೋ, ನಗಬೇಕೋ ತಿಳಿಯದಾಗಿದೆ. ಪಂಜಾಬ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಸಿಖ್ ಜನರು ಭಾರತದ ಮಟ್ಟದಲ್ಲಿ ಕಡಿಮೆ ಇದ್ದಾರೆ. ಹಾಗೆಯೇ ರಾಜ್ಯದಲ್ಲಿ ಲಿಂಗಾಯತರ ಸಂಖ್ಯೆ ಹೆಚ್ಚು ಇದ್ದರೂ ಜಾಗತಿಕ ಧರ್ಮವಾಗಿ ಲಿಂಗಾಯತರ ಸಂಖ್ಯೆ ದೇಶದಲ್ಲಿ ಕಡಿಮೆ ಇದೆ. ಹಾಗಾಗಿ ಅಲ್ಪಸಂಖ್ಯಾತ ಸ್ಥಾನಮಾನ ಅಗತ್ಯವಿರುವುದಾಗಿ ಹೇಳಿದರು.
‘ಕರ್ನಾಟಕದಲ್ಲಿ ಒಕ್ಕಲಿಗರ ನಂತರ ಲಿಂಗಾಯತರು ಹೆಚ್ಚಿನ ಸಂಖ್ಯೆ ಇದ್ದಾರೆ. ಹೀಗಿರುವಾಗ ಅಲ್ಪಸಂಖ್ಯಾತ ಸ್ಥಾನ ಮಾನ ಹೇಗೆ’ ಎಂದು ಡಾ.ಚಿದಾನಂದಮೂರ್ತಿ ಪ್ರಶ್ನಿಸಿದ್ದರು.
ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶ್ಯಾಮನೂರು ಶಿವಶಂಕರಪ್ಪ ಹಾಗೂ ಪೌರಾಡಳಿತ ಸಚಿವ ಈಶ್ವರ ಖಂಡ್ರೆ ಅವರ ಮಾತುಗಳನ್ನು ಗಣನೆಗೆ ತೆಗೆದುಕೊಳ್ಳದೆ ಇರುವುದು ಉತ್ತಮ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.