ಹುಬ್ಬಳ್ಳಿ: ‘ಆಮ್ ಆದ್ಮಿ ಪಕ್ಷದ ಸಂಸ್ಥಾಪಕ ಅರವಿಂದ ಕೇಜ್ರಿವಾಲ್ ಬೆಂಗಳೂರಿಗೆ ಬಂದು ಸದ್ದು ಮಾಡಿದ್ದಾರೆಯೇ ಹೊರತು ಚುನಾವಣೆ ಫಲಿತಾಂಶದ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ಹೇಳಿದರು.
ಇಲ್ಲಿನ ಚವ್ಹಾಣ್ ಗ್ರೀನ್ ಗಾರ್ಡನ್ನ ಶಿವಪುರ ಕಾಲೊನಿಯಲ್ಲಿರುವ ಶಿವಮಂದಿರದಲ್ಲಿ ಸೋಮವಾರ ಪೂಜೆ ಸಲ್ಲಿಸಿ ಪಾದಯಾತ್ರೆ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು.
‘ವಾರಾಣಸಿಯಲ್ಲಿ ಕೇಜ್ರಿವಾಲ್ ಸ್ಪರ್ಧೆಯಿಂದ ನರೇಂದ್ರ ಮೋದಿ ಅವರಿಗೆ ಹಿನ್ನಡೆಯಾಗಲಿದೆಯೇ’ ಎಂಬ ಪ್ರಶ್ನೆಗೆ, ಹೊಟ್ಟೆ ಪಕ್ಷದ ರಂಗಸ್ವಾಮಿಯೂ ಈ ಹಿಂದೆ ಹಲವು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದರು ಎಂದು ಮಾರ್ಮಿಕವಾಗಿ ನುಡಿದರು.
‘ಪ್ರಮೋದ್ ಮುತಾಲಿಕ್ ಸ್ಪರ್ಧೆಯಿಂದ ಹಿಂದೂಗಳ ಮತ ವಿಭಜನೆಯಾಗಿ ನನಗೆ ತೊಂದರೆಯಾಗಲಿದೆ ಎನ್ನುವುದು ಸುಳ್ಳು. ವಾಸ್ತವವಾಗಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ –ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಿನ ತ್ರಿಕೋನ ಸ್ಪರ್ಧೆ ಇದೆ’ ಎಂದರು.
ಬೀದರ್, ಮಂಡ್ಯ ಹಾಗೂ ಹಾಸನ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಮಂಗಳವಾರ ಅಂತಿಮಗೊಳ್ಳಲಿದೆ. ನರೇಂದ್ರ ಮೋದಿ ರಾಜ್ಯದಲ್ಲಿ ಇನ್ನೂ ಮೂರು ರ್ಯಾಲಿಗಳಲ್ಲಿಪಾಲ್ಗೊಳ್ಳಲಿದ್ದು, ಶೀಘ್ರ ಸ್ಥಳ ನಿರ್ಧರಿಸಲಾಗುವುದು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.