ಮಂಡ್ಯ: ‘ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ’ ಎಂದು ಆರೋಪಿಸಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರು ನಗರದ ಪಶ್ಚಿಮ ಠಾಣೆಗೆ ಗುರುವಾರ ದೂರು ನೀಡಿದ್ದಾರೆ.
‘ಏ.17ರ ಮಧ್ಯಾಹ್ನ 2 ಗಂಟೆ ಸಮಯದಲ್ಲಿ ಚುನಾವಣಾ ಕೆಲಸದಲ್ಲಿ ನಿರತರಾಗಿದ್ದಾಗ 90086 65774 ಮೊಬೈಲ್ ಸಂಖ್ಯೆಯಿಂದ ಕರೆ ಬಂತು. ಅನಾಮಧೇಯ ವ್ಯಕ್ತಿಯೊಬ್ಬ, ದೂರು ನೀಡಿರುವ ಚುನಾವಣಾ ಸಿಬ್ಬಂದಿಯೊಬ್ಬರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ, ಅವಾಚ್ಯ ಶಬ್ದಗಳಿಂದ ನಿಂದಿಸಿದ’ ಎಂದು ದೂರಿನಲ್ಲಿ ತಿಳಿಸಿದ್ದಾರೆ. ತುರ್ತು ಚುನಾವಣಾ ಕಾರ್ಯದಲ್ಲಿ ತೊಡಗಿದ್ದ ಕಾರಣ ತಕ್ಷಣ ದೂರು ನೀಡಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದ್ದಾರೆ.
‘ಕರೆ ಮಾಡಿದ್ದ ವ್ಯಕ್ತಿ ಆರಂಭದಲ್ಲಿ ನಾಗಮಂಗಲ ಕ್ಷೇತ್ರದ ಚುನಾವಣಾ ವಿಚಾರ ಪ್ರಸ್ತಾಪಿಸಿದ. ನಾನು ಉತ್ತರ ಕೊಡುತ್ತಿದ್ದಾಗ ಉದ್ವೇಗಕ್ಕೆ ಒಳಗಾಗಿ ಬಾಯಿಗೆ ಬಂದಂತೆ ನಿಂದಿಸಿ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ’ ಎಂದು ಜಿಲ್ಲಾಧಿಕಾರಿ ಮಂಜುಶ್ರೀ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.