ಕಲಬುರ್ಗಿ: ಸಂಸದ ಮಲ್ಲಿಕಾರ್ಜುನ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಆಪ್ತರು ಹಾಗೂ ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ (ಬಿಜೆಪಿ)ರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ದಾಳಿ ಮಾಡಿದರು.
ಕಲಬುರ್ಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಗುತ್ತಿಗೆದಾರ ನೀಲಕಂಠರಾವ್ ಮೂಲಗೆ ಅವರ ಕಲಬುರ್ಗಿ ಮನೆ, ಚಿಂಚೋಳಿ ತಾಲ್ಲೂಕು ಸುಲೇಪೇಟದ ಕಾಂಗ್ರೆಸ್ ಮುಖಂಡ ಬಸವರಾಜ ವಿ.ಸಜ್ಜನ್ ಅವರ ಮನೆ, ಕಚೇರಿ ಮತ್ತು ಯಲಕಪಳ್ಳಿಯ ಜಲ್ಲಿಕಲ್ಲು ಘಟಕ ಹಾಗೂ ಕಲಬುರ್ಗಿ ತಾಲ್ಲೂಕು ಸಣ್ಣೂರದ ಬಿಜೆಪಿ ಮುಖಂಡ ಅರವಿಂದ ಚವಾಣ್ ಅವರ ಮನೆ ಮೇಲೆ ದಾಳಿ ಮಾಡಿದರು.
‘ಚುನಾವಣೆ ಘೋಷಣೆಗೂ ಮುನ್ನ ಗುತ್ತಿಗೆದಾರರಿಗೆ ಹೆಚ್ಚಿನ ಹಣ ಬಿಡುಗಡೆ ಮಾಡಲಾಗಿದೆ ಎಂಬ ಮಾಹಿತಿ ಅನ್ವಯ ಈ ದಾಳಿ ನಡೆದಿದೆ ಎನ್ನಲಾಗಿದೆ. ಹುಬ್ಬಳ್ಳಿ ಮತ್ತು ಬಳ್ಳಾರಿಯಿಂದ ಬಂದಿದ್ದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿದರು. ಈ ವೇಳೆ ಮನೆಯಲ್ಲೇ ಇದ್ದ ಮೂಲಗೆ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದರು’ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.