ಶಿವಮೊಗ್ಗ: ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಪುನರುಚ್ಚರಿಸಿದರು.
ನಗರದಲ್ಲಿ ಗುರುವಾರ ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ, ಅಧ್ಯಕ್ಷ ಸ್ಥಾನ ಬದಲಾವಣೆ, ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮತ್ತಿತರರ ಪತ್ರಕರ್ತರ ಪ್ರಶ್ನೆಗಳಿಗೆ ಸ್ಪಷ್ಟ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ರಾಷ್ಟ್ರೀಯ ನಾಯಕರಿಗೆ ಸಂಪೂರ್ಣ ಅಧಿಕಾರ ಇದೆ. ಅವರು ಏನೇ ನಿರ್ಧಾರ ಪ್ರಕಟಿಸಿದರೂ ಸ್ವೀಕರಿಸುತ್ತೇವೆ ಎಂದರು.
ಪಕ್ಷದಲ್ಲಿ ಗೊಂದಲ ಇದ್ದಿದ್ದು ನಿಜ. ಗುಂಪುಗಾರಿಕೆ ಆಗಿದ್ದು ನಿಜ. ಇನ್ನು ಮುಂದೆ ಈ ರೀತಿಯ ಯಾವುದೇ ಗೊಂದಲಗಳು ಇರುವುದಿಲ್ಲ. ನಮ್ಮಿಂದ ತಪ್ಪಾಗಿದೆ. ಇದರಿಂದ ಜನತೆ ಕೂಡ ಬೇಸತ್ತಿದ್ದಾರೆ. ಈ ಬಗ್ಗೆ ರಾಜ್ಯದ ಜನರ ಕ್ಷಮೆ ಯಾಚಿಸುತ್ತೇನೆ ಎಂದು ಹೇಳಿದರು.
ರಾಜ್ಯ ಸರ್ಕಾರ ಪೂರ್ಣಾವಧಿ ಪೂರೈಸಲಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗುವುದು ಎಂದರು.
ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಆಡಳಿತ ವೈಖರಿ ಬಗೆಗಿನ ಪ್ರಶ್ನೆಗೆ ಸಿಡಿಮಿಡಿಗೊಂಡ ಈಶ್ವರಪ್ಪ, `ಈ ರೀತಿಯ ಪ್ರಶ್ನೆಗಳನ್ನು ಯಾರಿಗೂ ಕೇಳಬೇಡಿ~ ಎಂದಷ್ಟೇ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.