ADVERTISEMENT

ಗೀತಾ ಶಿವರಾಜ್‌ಕುಮಾರ್ ಚುನಾವಣಾ ಕಣಕ್ಕೆ?

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2014, 19:30 IST
Last Updated 5 ಮಾರ್ಚ್ 2014, 19:30 IST

ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ದಿ. ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜ್‌ಕುಮಾರ್ ಸ್ಪರ್ಧೆ ಮಾಡುವ ಸಾಧ್ಯತೆ ಹೆಚ್ಚಾಗಿದೆ.

ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.­ಕುಮಾರಸ್ವಾಮಿ, ಶಾಸಕರಾದ ಮಧು ಬಂಗಾರಪ್ಪ, ಜಮೀರ್ ಅಹ್ಮದ್‌ ಅವರು ಬುಧವಾರ ಇಲ್ಲಿ ಚಿತ್ರ ನಟ ಶಿವರಾಜ್‌ಕುಮಾರ್‌ ಮನೆಗೆ ತೆರಳಿ ಗೀತಾ ಅವರನ್ನು ಕಣಕ್ಕೆ ಇಳಿಸುವ ಬಗ್ಗೆ ಸಮಾಲೋಚನೆ ನಡೆಸಿದರು.

ಗೀತಾ ಅವರು ರಾಜಕೀಯ ಕ್ಷೇತ್ರ ಪ್ರವೇಶಿಸಿಲು ಒಪ್ಪಿದ್ದು, ಶಿವರಾಜ್‌ ಕುಮಾರ್‌ ಸಹ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಮಧು ಬಂಗಾರಪ್ಪ ತಿಳಿಸಿದರು.

‘ಶಕುಂತಲಾ ಬಂಗಾರಪ್ಪ, ಗೀತಾ ಶಿವರಾಜ್‌­ಕುಮಾರ್‌, ಸುಜಾತಾ ತಿಲಕ್‌ಕುಮಾರ್‌ ಹಾಗೂ ನಾನು ಸ್ಪರ್ಧೆಗೆ ಸಿದ್ಧರಿದ್ದೇವೆ. ನಮ್ಮಲ್ಲಿ ಯಾರು ಕಣಕ್ಕೆ ಇಳಿಯಬೇಕು ಎಂಬುದನ್ನು ಕ್ಷೇತ್ರದ ಜನತೆಗೆ ಬಿಡುತ್ತೇವೆ’ ಎಂದರು.

ಈ ತಿಂಗಳ 16 ಅಥವಾ 17ರಂದು ಶಿವಮೊಗ್ಗದಲ್ಲಿ ಬಂಗಾರಪ್ಪ ಅಭಿಮಾನಿಗಳ ಬಹಿರಂಗಸಭೆ ನಡೆಯಲಿದ್ದು, ಯಾರು ಕಣಕ್ಕೆ ಇಳಿಯಬೇಕು ಎಂಬುದು ಆ ಸಭೆಯಲ್ಲಿ ನಿರ್ಧಾರವಾಗಲಿದೆ ಎಂದು ತಿಳಿಸಿದರು.

ಲೋಕಸಭಾ ಚುನಾವಣೆ ಘೋಷಣೆಯಾದ ಬೆನ್ನಿಗೇ ಜೆಡಿಎಸ್‌ ನಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದ್ದು, 3-4 ದಿನಗಳಲ್ಲಿ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ದುರುಪಯೋಗ ತಡೆಯಲಿ: ರಾಜ್ಯದಲ್ಲಿನ ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಅಧಿಕಾರ ದುರುಪಯೋಗಪಡಿಸಿ ಕೊಳ್ಳುವ ಸಾಧ್ಯತೆ ಇದೆ. ನಿಷ್ಪಕ್ಷಪಾತ­ವಾಗಿ ಚುನಾವಣೆ ನಡೆಸಲು ಚುನಾವಣಾ ಆಯೋಗ ಕ್ರಮಕೈ­ಗೊ­ಳ್ಳಬೇಕು ಎಂದು ಎಚ್‌.ಡಿ.­ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಸುವ ಆಯೋಗದ ತೀರ್ಮಾನವನ್ನು ಅವರು ಸ್ವಾಗತಿಸಿದ್ದಾರೆ.
ಪಕ್ಷದ ಸಂಸದೀಯ ಮಂಡಳಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸ­ಲಾಗುವುದು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.