ಗುಲ್ಬರ್ಗ: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲು ಜನಪ್ರತಿನಿಧಿಗಳು ಅವಕಾಶ ನೀಡುತ್ತಿಲ್ಲ. ಅಲ್ಲದೆ, ಪಿಡಿಒಗಳ ಮೇಲೆ ಹಲ್ಲೆ ನಡೆದ ಘಟನೆಗಳ ಬಗ್ಗೆ ಸರ್ಕಾರ ಕ್ರಮ ಜರುಗಿಸುತ್ತಿಲ್ಲ ಎಂದು ಮನನೊಂದು ಜಿಲ್ಲೆಯ 69 ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗಳು ಸೋಮವಾರ ಇಲ್ಲಿ ಸಾಮೂಹಿಕ ರಾಜೀನಾಮೆ ಸಲ್ಲಿಸಿದರು.
ತಾಲ್ಲೂಕಿನ ಸಣ್ಣೂರು ಗ್ರಾಮ ಪಂಚಾಯಿತಿ ಪಿಡಿಒ ಮಂದಾಕಿನಿ ಭಾನುವಾರ ನೇಣು ಬಿಗಿದುಕೊಂಡಿದ್ದಾರೆ. ಆತ್ಮಹತ್ಯೆಗೆ ಶರಣಾದ ಮರುದಿನವೆ ಜಿಲ್ಲೆಯ ಒಟ್ಟು 89 ಪಿಡಿಒಗಳಲ್ಲಿ 69 ಅಧಿಕಾರಿಗಳು ಈ ನಿರ್ಧಾರ ಕೈಗೊಂಡಿದ್ದಾರೆ.
ಬೀದರ್, ಕೊಪ್ಪಳ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪಿಡಿಒಗಳ ಮೇಲೆ ತೀವ್ರ ಹಲ್ಲೆ ಘಟನೆ ನಡೆದ ಸಂದರ್ಭದಲ್ಲಿ ಸರ್ಕಾರವು ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ವಿಶ್ಲೇಷಣೆ ಒಳಗೊಂಡ ಒಂದೇ ಪತ್ರದಲ್ಲಿ ಎಲ್ಲ ಪಿಡಿಒಗಳು ಸಹಿ ಮಾಡಿರುವ ರಾಜೀನಾಮೆ ಪತ್ರವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ)ಗೆ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರ ಸ್ವೀಕರಿಸಿರುವ ಸಿಇಒ ವಿಜಯಕುಮಾರ್, ~ಈ ಪತ್ರವನ್ನು ಸರ್ಕಾರಕ್ಕೆ ಕಳುಹಿಸಲಾಗುವುದು. ಔಪಚಾರಿಕವಾಗಿ ಎಲ್ಲರೂ ಪ್ರತ್ಯೇಕವಾಗಿ ರಾಜೀನಾಮೆ ನೀಡಿದರಷ್ಟೇ ಅದನ್ನು ಅಧಿಕೃತ ಎಂದು ಪರಿಗಣಿಸಲಾಗುತ್ತದೆ~ ಎಂದು `ಪ್ರಜಾವಾಣಿ~ಗೆ ತಿಳಿಸಿದರು.
ಸಾಮೂಹಿಕ ರಜೆ
ಮುದ್ದೇಬಿಹಾಳ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಮೇಲೆ ಜಿಲ್ಲೆಯ ವಿವಿಧೆಡೆ ಆಗಾಗ್ಗೆ ಹಲ್ಲೆ ನಡೆಯುತ್ತಿದ್ದರೂ ಯಾವುದೇ ಕ್ರಮ ಜರುಗಿಸದಿರುವುದನ್ನು ಖಂಡಿಸಿ ಸೋಮವಾರ ಇಲ್ಲಿ ಪ್ರತಿಭಟನೆ ನಡೆಸಿದ ನೌಕರರು ಸಾಮೂಹಿಕ ರಜೆ ಹಾಕುವ ನಿರ್ಧಾರ ತೆಗೆದುಕೊಂಡರು.
ಧಾರವಾಡ ವರದಿ: ಧಾರವಾಡದಲ್ಲಿಯೂ ಪಿಡಿಒಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ, ಆಡಳಿತದ ನಿರ್ಲಕ್ಷ್ಯ ಧೋರಣೆಯನ್ನು ವಿರೋಧಿಸಿ ಪ್ರತಿಭಟಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.