ಬೆಂಗಳೂರು: ‘ರಾಜ್ಯದಲ್ಲಿ ಕಾಂಗ್ರೆಸ್ ಪ್ರಾಯೋಜಿತ ಗೂಂಡಾಗಿರಿ, ರಾಜಕೀಯ ಹತ್ಯೆಗಳು ಮತ್ತು ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಬಗ್ಗೆ ರಾಹುಲ್ಗಾಂಧಿ ಬಾಯಿ ಬಿಡಬೇಕು’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳೀಧರ ರಾವ್ ಆಗ್ರಹಿಸಿದ್ದಾರೆ.
ರಾಜ್ಯದ ಜನರ ಗಮನ ಬೇರೆಡೆ ಸೆಳೆಯಲು ಅರ್ಥಹೀನ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.
ಈ ವಿಷಯವಾಗಿ ಬಿಜೆಪಿ ಎತ್ತಿರುವ ಪ್ರಶ್ನೆಗಳಿಗೆ ಉತ್ತರ ನೀಡುವ ಧೈರ್ಯ ರಾಹುಲ್ಗೆ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತದಲ್ಲಿ ಸಮಾಜ ವಿರೋಧಿ ಮತ್ತು ದೇಶ ವಿರೋಧಿ ಶಕ್ತಿಗಳು ಮುಗ್ದರ ಹತ್ಯೆ ನಡೆಸುತ್ತಿದ್ದಾರೆ. ದುರಾಡಳಿತದ ಪರಿಣಾಮ ಸಾವಿರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ರಾಹುಲ್ ಮೌನ ವಹಿಸಿರುವುದು ಏತಕ್ಕೆ ಎಂದು ಅವರು ಪ್ರಶ್ನಿಸಿದರು.
‘ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ ಕಾಂಗ್ರೆಸ್ ಎತ್ತಿರುವ ಎಲ್ಲ ಪ್ರಶ್ನೆಗಳಿಗೂ 2019 ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಸಾಕ್ಷ್ಯ ಸಮೇತ ತಕ್ಕ ಉತ್ತರ ನೀಡುತ್ತೇವೆ. ಅಲ್ಲಿಯ ತನಕ ಕಾಯಲಿ. ಈಗ ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ಬೆಂಬಲಿಗರಿಂದ ನಡೆಯುತ್ತಿರುವ ಗೂಂಡಾಗಿರಿ, ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಜನರಿಗೆ ಉತ್ತರ ನೀಡಬೇಕು’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.