ಬೆಂಗಳೂರು: ‘ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಮಾನ್ಯತೆ ನೀಡುವಂತೆ ಕರ್ನಾಟಕ ಸರ್ಕಾರದಿಂದ ಈವರೆಗೂ ಯಾವುದೇ ಪ್ರಸ್ತಾವ ಬಂದಿಲ್ಲ. ಆದರೆ, ಈ ಸಮುದಾಯದವರನ್ನು ಧಾರ್ಮಿಕ ಅಲ್ಪಸಂಖ್ಯಾತರೆಂದು ಪರಿಗಣಿಸುವಂತೆ ಸಲ್ಲಿಸಿರುವ ಪ್ರಸ್ತಾವ ಮಾರ್ಚ್ 26ರಂದು ತಲುಪಿದೆ’ ಎಂದು ಕೇಂದ್ರ ಅಲ್ಪಸಂಖ್ಯಾತ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ತಿಳಿಸಿದ್ದಾರೆ.
ಮಾರ್ಚ್ 28ರಂದು ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಲೋಕಸಭೆಯಲ್ಲಿ ಕೇಳಿದ ಚುಕ್ಕೆರಹಿತ ಪ್ರಶ್ನೆಗೆ ನಖ್ವಿ ಈ ಉತ್ತರ ನೀಡಿದ್ದಾರೆ.
ಆದರೆ, ಮೈಸೂರಿನಲ್ಲಿ ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ‘ಲಿಂಗಾಯತ ಪ್ರತ್ಯೇಕ ಧರ್ಮದ ಶಿಫಾರಸು ಕೇಂದ್ರ ಸರ್ಕಾರಕ್ಕೆ ತಲುಪಿಲ್ಲ’ ಎಂದು ಹೇಳಿದ್ದರು.
‘ವೀರಶೈವ ಲಿಂಗಾಯತರು ಹಿಂದೂ ಧರ್ಮದ ಭಾಗ. 2011ರಲ್ಲಿ ನಡೆದ ಜನಗಣತಿಯಲ್ಲಿ ವೀರಶೈವ ಲಿಂಗಾಯತಕ್ಕೆ ಪ್ರತ್ಯೇಕ ಕೋಡ್ ನೀಡಿಲ್ಲ’ ಎಂದು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗಕ್ಕೆ 2013ರ ನ. 14ರಂದು ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾದ (ಆರ್ಜಿಐ) ಮುಖ್ಯಸ್ಥರು ಮಾಹಿತಿ ನೀಡಿದ್ದರು. ಈ ಬಗ್ಗೆ ನಮ್ಮ ಸಚಿವಾಲಯಕ್ಕೆ ಕೇಂದ್ರ ಗೃಹ ಇಲಾಖೆ ಮಾಹಿತಿ ನೀಡಿದೆ’ ಎಂದೂ ನಖ್ವಿ ಉತ್ತರದಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.