ADVERTISEMENT

ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ಎಸ್‌ಐಟಿಯಿಂದ ಮತ್ತೊಬ್ಬನ ಬಂಧನ

ಏಜೆನ್ಸೀಸ್
Published 12 ಜೂನ್ 2018, 13:26 IST
Last Updated 12 ಜೂನ್ 2018, 13:26 IST
ಗೌರಿ ಲಂಕೇಶ್, ಪರಶುರಾಮ್‌ ವಾಗ್ಮೋರೆ
ಗೌರಿ ಲಂಕೇಶ್, ಪರಶುರಾಮ್‌ ವಾಗ್ಮೋರೆ   

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿಯನ್ನು ಎಸ್‌ಐಟಿ ಬಂಧಿಸಿದೆ.

ಪರಶುರಾಮ್‌ ವಾಗ್ಮೋರೆ ಬಂಧಿತ ವ್ಯಕ್ತಿ. ಈತನನ್ನು ಎಸ್‌ಐಟಿ ತಂಡ ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ ಮಂಗಳವಾರ ಬಂಧಿಸಿದೆ.

ಬಂಧನದ ಬಳಿಕ, 3ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಆರೋಪಿಯ ಹೆಚ್ಚಿನ ವಿಚಾರಣೆಗೆ 14 ದಿನಗಳ ವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಲಾಯಿತು.

ADVERTISEMENT

ಈ ಪ್ರಕರಣದ ನಾಲ್ವರು ಆರೋಪಿಗಳನ್ನು ವಿಚಾರಣೆಗಾಗಿ ಸೋಮವಾರ ಮತ್ತೆ ನಾಲ್ಕು ದಿನಗಳವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಲಾಗಿತ್ತು.

ಸಾಹಿತಿ ಕೆ.ಎಸ್. ಭಗವಾನ್ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದಡಿ ಬಂಧಿಸಲಾಗಿದ್ದ ಶಿಕಾರಿಪುರದ ಕಪ್ಪನಹಳ್ಳಿ ಗ್ರಾಮದ ಸುಜಿತ್ ಕುಮಾರ್ ಅಲಿಯಾಸ್ ಪ್ರವೀಣ್ (37), ಮಹಾರಾಷ್ಟ್ರದ ಅಮೋಲ್ ಕಾಳೆ ಅಲಿಯಾಸ್ ಬಾಯ್‌ಸಾಬ್, ಅಮಿತ್ ದೇಗ್ವೇಕರ್ ಅಲಿಯಾಸ್ ಪ್ರದೀಪ (38) ಹಾಗೂ ವಿಜಯಪುರ ಜಿಲ್ಲೆ ರತ್ನಾಪುರ ಗ್ರಾಮದ ಮನೋಹರ್ ದುಂಡಪ್ಪ ಯಡವೆ ಅಲಿಯಾಸ್ ಮನೋಜ್ (29) ಎಂಬಾತನನ್ನು ಗೌರಿ ಹತ್ಯೆ ಪ್ರಕರಣದಲ್ಲೂ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದರು.

ಮೇ 31ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆಗಾಗಿ 10 ದಿನಗಳವರೆಗೆ ಕಸ್ಟಡಿಗೆ ಪಡೆದಿದ್ದರು. ಅವಧಿ ಮುಕ್ತಾಯವಾಗಿದ್ದರಿಂದ ‌ಆರೋಪಿಗಳನ್ನು ಸೋಮವಾರ ಮೂರನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ‘ಆರೋಪಿಗಳು ವಿಚಾರಣೆಗೆ ಸಹಕರಿಸುತ್ತಿಲ್ಲ. ಅವರನ್ನು ಮತ್ತಷ್ಟು ದಿನ ಕಸ್ಟಡಿಗೆ ನೀಡಬೇಕು’ ಎಂದು ಎಸ್‌ಐಟಿ ಅಧಿಕಾರಿಗಳು ಮನವಿ ಮಾಡಿದರು. ಅದನ್ನು ನ್ಯಾಯಾಲಯ ಪುರಸ್ಕರಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.