ADVERTISEMENT

ಚುನಾವಣೆಗೂ ಮುನ್ನವೇ ತಾನೇ ಪ್ರಧಾನಿ ಎಂದ ರಾಹುಲ್‌ ಗಾಂಧಿ; ಇದು ಪ್ರಜಾತಂತ್ರ ವ್ಯವಸ್ಥೆಗೆ ಪೆಟ್ಟು: ಮೋದಿ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 9 ಮೇ 2018, 9:45 IST
Last Updated 9 ಮೇ 2018, 9:45 IST
ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಬೀರಂಡಹಳ್ಳಿಯಲ್ಲಿ ಬುಧವಾರ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಜನರತ್ತ ಕೈ ಬೀಸಿದರು.
ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಬೀರಂಡಹಳ್ಳಿಯಲ್ಲಿ ಬುಧವಾರ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಜನರತ್ತ ಕೈ ಬೀಸಿದರು.   

ಕೋಲಾರ: ‘2019ಕ್ಕೆ ತಾನೇ ದೇಶದ ಪ್ರಧಾನಿ ಎಂದು ಬಡಾಯಿ ಕೊಚ್ಚಿರುವ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ರಾಜಕೀಯವಾಗಿ ಅಪ್ರಬುದ್ಧರು’ ಎಂದು ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದರು.

ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಬೀರಂಡಹಳ್ಳಿಯಲ್ಲಿ ಬುಧವಾರ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ‘ಚುನಾವಣೆಗೂ ಮುನ್ನವೇ ತಾನೇ ಪ್ರಧಾನಿ ಎಂದು ಹೇಳಿಕೊಂಡಿರುವ ರಾಹುಲ್‌ ಪ್ರಜಾತಂತ್ರ ವ್ಯವಸ್ಥೆಗೆ ದೊಡ್ಡ ಪೆಟ್ಟು ಕೊಟ್ಟಿದ್ದಾರೆ. ಅವರ ಅಹಂಕಾರ ಆಕಾಶದೆತ್ತರಕ್ಕೆ ಏರಿದೆ’ ಎಂದು ಟೀಕಿಸಿದರು.

‘ನನ್ನನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಬೇಕೆಂಬ ಉದ್ದೇಶದಿಂದ ರಾಹುಲ್‌ ಗಾಂಧಿ ಬೇರೆ ಪಕ್ಷಗಳ ಜತೆ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಅವರಿಗೆ ಮೈತ್ರಿಕೂಟದ ಮಹತ್ವವೇ ಗೊತ್ತಿಲ್ಲ. ಮೈತ್ರಿಕೂಟದಲ್ಲಿನ ಹಿರಿಯ ಮುಖಂಡರ ಬಗ್ಗೆ ಗೌರವವಿಲ್ಲ. ಗ್ರಾಮ ಪಂಚಾಯಿತಿಯಿಂದ ದೆಹಲಿವರೆಗೆ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿದ್ದು, ಜನ ಎಲ್ಲಾ ಕಡೆ ಕಾಂಗ್ರೆಸ್‌ ಪಕ್ಷವನ್ನು ತಿರಸ್ಕರಿಸಿದ್ದಾರೆ. ಈ ಕಟು ಸತ್ಯ ಒಪ್ಪಿಕೊಳ್ಳಲು ಸಿದ್ಧರಿಲ್ಲದ ರಾಹುಲ್‌ ಗಾಂಧಿ ಪ್ರಜಾಪ್ರಭುತ್ವದ ಆಶಯವನ್ನು ನುಚ್ಚು ನೂರು ಮಾಡುತ್ತಿದ್ದಾರೆ’ ಎಂದರು.

ADVERTISEMENT

‘ಜನರು ಟ್ಯಾಂಕರ್‌ ನೀರಿಗಾಗಿ ಬಿಂದಿಗೆ ಹಿಡಿದು ಕಾಯುವಂತೆ ಕಾಂಗ್ರೆಸ್‌ ಮೈತ್ರಿಕೂಟದ ಪಕ್ಷಗಳಲ್ಲಿನ ಹಿರಿಯ ಮುಖಂಡರು ಪ್ರಧಾನಿ ಹುದ್ದೆಗೆ ಸಾಲುಗಟ್ಟಿ ನಿಂತಿದ್ದಾರೆ. ಆದರೆ, ಬಲಾಢ್ಯರು ಸಾಮಾನ್ಯ ಜನರನ್ನು ಸಾಲಿನಿಂದ ಪಕ್ಕಕ್ಕೆ ಸರಿಸಿ ಟ್ಯಾಂಕರ್‌ ನೀರು ಹಿಡಿದುಕೊಳ್ಳುವಂತೆ; ರಾಹುಲ್‌ ಗಾಂಧಿ ಮೈತ್ರಿಕೂಟದಲ್ಲಿನ ಹಿರಿಯರನ್ನೆಲ್ಲಾ ಪಕ್ಕಕ್ಕೆ ತಳ್ಳಿ ಪ್ರಧಾನಿಯಾಗಲು ಹೊರಟಿದ್ದಾರೆ’ ಎಂದು ಲೇವಡಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.