ತುಮಕೂರು: ‘ರಾಜ್ಯದಲ್ಲಿ 35 ಲಕ್ಷ ಗೊಲ್ಲ(ಯಾದವ) ಸಮುದಾಯದವರಿದ್ದಾರೆ. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ 3 ಟಿಕೆಟ್ ಈ ಸಮುದಾಯಕ್ಕೆ ಬಿಜೆಪಿ ನೀಡಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.
ಶುಕ್ರವಾರ ಬಿಜೆಪಿ ಪಕ್ಷದಿಂದ ಆಯೋಜಿಸಿದ್ದ ರಾಜ್ಯ ಮಟ್ಟದ ಗೊಲ್ಲ(ಯಾದವ) ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
‘ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ತುಮಕೂರು, ಬೆಳಗಾವಿ ಮುಂತಾದ ಜಿಲ್ಲೆಗಳಲ್ಲಿ ಗೊಲ್ಲ ಸಮುದಾಯದ ಜನ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸಮುದಾಯದವರು ಸಂಘಟಿತರಾಗಿ ಬಿಜೆಪಿಗೆ ಶಕ್ತಿ ತುಂಬಬೇಕು. ನಿಮ್ಮ ಸಮುದಾಯದ ಅಭ್ಯರ್ಥಿಗಳನ್ನು ಗೆಲ್ಲಿಸುವುದರ ಜತೆಗೆ ಬೇರೆ ಕಡೆ ಸ್ಪರ್ಧಿಸುವ ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನೂ ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.
ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದ 3 ತಿಂಗಳಲ್ಲಿ ₹1 ಕೋಟಿ ಅನುದಾನವನ್ನು ಕೃಷ್ಣ ಯಾದವಾನಂದ ಮಠಕ್ಕೆ ಬಿಡುಗಡೆ ಮಾಡಲಾಗುವುದು. ಜತೆಗೆ, ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.