ಬೆಂಗಳೂರು: ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರ ಪರ ಲಾಬಿ ಮಾಡಲು ಪೌರಾಡಳಿತ ಸಚಿವ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ನಾಲ್ಕು ಮಂದಿ ಸಚಿವರು ಗುರುವಾರ ರಾತ್ರಿ ದೆಹಲಿಗೆ ದೌಡಾಯಿಸಿದರು.
ಇವರ ಜತೆ ಸಚಿವರಾದ ಸಿ.ಪಿ.ಯೋಗೇಶ್ವರ್, ಆನಂದ ಅಸ್ನೋಟಿಕರ್ ಮತ್ತು ವರ್ತೂರು ಪ್ರಕಾಶ್ ದೆಹಲಿಗೆ ತೆರಳಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ, ಮುಖಂಡರಾದ ಎಲ್.ಕೆ.ಅಡ್ವಾಣಿ ಸೇರಿದಂತೆ ಇತರ ಪ್ರಮುಖರನ್ನು ಭೇಟಿ ಮಾಡಿ ಯಾವುದೇ ಕಾರಣಕ್ಕೂ ಸದಾನಂದ ಗೌಡರನ್ನು ಬದಲಾಯಿಸದಂತೆ ಮನವಿ ಮಾಡಲಿದ್ದಾರೆ ಎಂದು ಗೊತ್ತಾಗಿದೆ.
ಯಡಿಯೂರಪ್ಪ ಪರ ಲಾಬಿ ಮಾಡಲು ಕೆಲ ಸಚಿವರು ದೆಹಲಿಗೆ ಹೋಗಿದ್ದಾರೆ. ಹಾಗೆಯೇ ಸದಾನಂದ ಗೌಡರ ಪರವೂ ಲಾಬಿ ಮಾಡಲು ಈ ತಂಡ ತೆರಳಿದೆ. ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣ ಯಾರು ಎಂಬುದರ ಬಗ್ಗೆ ತನಿಖೆ ನಡೆಸಬೇಕು. ಇದನ್ನು ಸದಾನಂದ ಗೌಡರ ಮೇಲೆ ಹೇರುವುದು ಸರಿಯಲ್ಲ ಎಂದೂ ಈ ಸಚಿವರು ಪಕ್ಷದ ವರಿಷ್ಠರಿಗೆ ಮನವರಿಕೆ ಮಾಡಿಕೊಡಲಿದ್ದಾರೆ ಎನ್ನಲಾಗಿದೆ.
ಅಶೋಕ್ ದೆಹಲಿಗೆ: ಗೃಹ ಸಚಿವ ಆರ್.ಅಶೋಕ ಕೂಡ ಸಂಜೆ ದೆಹಲಿಗೆ ತೆರಳಿದ್ದಾರೆ. ವರಿಷ್ಠರ ಕರೆ ಮೇಲೆ ಅವರು ತೆರಳಿದ್ದು, ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ಇವರಿಂದಲೂ ವರಿಷ್ಠರು ಮಾಹಿತಿ ಪಡೆಯಲಿದ್ದಾರೆ ಎಂದು ಗೊತ್ತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.