ADVERTISEMENT

ಜಿಲ್ಲಾಧಿಕಾರಿಗಳಿಗೆ ತಾಕೀತು

​ಪ್ರಜಾವಾಣಿ ವಾರ್ತೆ
Published 13 ಜುಲೈ 2012, 19:30 IST
Last Updated 13 ಜುಲೈ 2012, 19:30 IST

ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಜಿಲ್ಲಾಧಿಕಾರಿಗಳ ಜೊತೆ ಮೊದಲ ಬಾರಿಗೆ ವಿಡಿಯೊ ಸಂವಾದ ನಡೆಸಿದ ಜಗದೀಶ ಶೆಟ್ಟರ್, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೆಗಾ) ಅನುಷ್ಠಾನದಲ್ಲಿ ಯಾವುದೇ ಲೋಪವಾಗದಂತೆ ನಿಗಾ ವಹಿಸಬೇಕು ಎಂದು ತಾಕೀತು ಮಾಡಿದರು. 

 ಗ್ರಾಮೀಣ ಭಾಗದ ಜನ ಯಾವ ಕಾರಣಕ್ಕೂ ಉದ್ಯೋಗ ದೊರೆಯದಂಥ ಸ್ಥಿತಿ ಎದುರಿಸಬಾರದು ಎಂದು ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

 ಅಕ್ರಮ ಸಂಪರ್ಕ: ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಜಿಲ್ಲೆಯ ಹಲವೆಡೆ ಕೊಳವೆ ಬಾವಿ ಕೊರೆಸಲಾಗಿತ್ತು. ಆದರೆ ವಿದ್ಯುತ್ ಸರಬರಾಜು ಕಂಪೆನಿಯಿಂದ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ದೊರೆತಿಲ್ಲ. ಈ ಕಾರಣದಿಂದ, ಕೆಲವು ಕೊಳವೆ ಬಾವಿಗಳಿಗೆ ಅಳವಡಿಸಲಾದ ಪಂಪ್‌ಸೆಟ್‌ಗಳಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆಯಲಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ತಿಳಿಸಿದರು.

`ಕೊಪ್ಪಳದಲ್ಲಿ ನರೆಗಾ ಯೋಜನೆಯ ಅನುಷ್ಠಾನದಲ್ಲಿ ಹಣಕಾಸಿನ ಅವ್ಯವಹಾರ ನಡೆದಿದೆ ಎಂಬ ದೂರು ಬಂದಿದೆ. ಯೋಜನೆಯಡಿ ಈ ಬಾರಿ ಬಿಡುಗಡೆ ಮಾಡಲಾದ 59 ಕೋಟಿ ರೂಪಾಯಿ ಪೈಕಿ ಕೇವಲ 1 ಕೋಟಿ ರೂಪಾಯಿ ವಿನಿಯೋಗ ಆಗಿದೆ.

ಜನರಿಗೆ ಕೆಲಸ ದೊರೆಯದ ಸ್ಥಿತಿ ನಿರ್ಮಾಣವಾದರೆ ನಿಮ್ಮನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು~ ಎಂದು ಕೊಪ್ಪಳ ಜಿಪಂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗೆ ಎಚ್ಚರಿಕೆ ನೀಡಿದರು. ಮೇವು ಬ್ಯಾಂಕ್‌ನಿಂದ ಉಚಿತವಾಗಿ ಮೇವು ವಿತರಣೆ ಮಾಡಬೇಡಿ.  ಇದು ಅವ್ಯವಹಾರಕ್ಕೆ ಎಡೆ ಮಾಡಿಕೊಡುತ್ತದೆ ಎಂದು ಬಾಗಲಕೋಟೆ ಜಿಲ್ಲಾಧಿಕಾರಿಗೆ ಸೂಚಿಸಿರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.