ADVERTISEMENT

ಟಿಕೆಟ್ ಘೋಷಣೆಗೆ ಮೊದಲೇ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2013, 19:48 IST
Last Updated 12 ಏಪ್ರಿಲ್ 2013, 19:48 IST

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಸಚಿವ ಗೋವಿಂದ ಕಾರಜೋಳ ಸೇರಿದಂತೆ ಒಟ್ಟು 100 ಅಭ್ಯರ್ಥಿಗಳು ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ.

ಕಾರಜೋಳ ಅವರಿಗೆ ಇನ್ನೂ ಬಿಜೆಪಿ ಟಿಕೆಟ್ ಹಂಚಿಕೆಯಾಗಿಲ್ಲ. ಆದರೂ ಮುಧೋಳ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.  ಮುಧೋಳ ಅಥವಾ ನಾಗಠಾಣ ಕ್ಷೇತ್ರದಲ್ಲಿ ಸ್ಪರ್ಧಿಸುವ ಬಗ್ಗೆ ಅವರು ಗೊಂದಲದಲ್ಲಿ ಇದ್ದ ಕಾರಣ ಟಿಕೆಟ್ ಹಂಚಿಕೆ ಆಗಿರಲಿಲ್ಲ. ಅಂತಿಮವಾಗಿ ಮುಧೋಳದಲ್ಲೇ ನಾಮಪತ್ರ ಸಲ್ಲಿಸಿದ್ದು, ಮೂರನೇ ಪಟ್ಟಿಯಲ್ಲಿ ಅವರಿಗೆ ಟಿಕೆಟ್ ನೀಡಲಾಗುತ್ತದೆ. ಪಕ್ಷದ `ಬಿ' ಫಾರಂ ನಂತರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶಿವರಾಜ ಸಜ್ಜನ (ಬ್ಯಾಡಗಿ) ಬಿ.ಪಿ.ಹರೀಶ (ಹರಿಹರ), ಹರತಾಳು ಹಾಲಪ್ಪ (ಸೊರಬ) ಅವರು ಕೆಜೆಪಿ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ. ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಅವರು ಶ್ರೀನಿವಾಸಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾಗಿ ಮುದ್ದೇಬಿಹಾಳ ಕ್ಷೇತ್ರದಿಂದ ಅಪ್ಪಾಜಿ ನಾಡಗೌಡ, ಬಬಲೇಶ್ವರದಿಂದ ಎಂ.ಬಿ. ಪಾಟೀಲ ನಾಮಪತ್ರ ಸಲ್ಲಿಸಿದ್ದಾರೆ.

ಬುಧವಾರ ನಾಮಪತ್ರ ಸಲ್ಲಿಸಿದ್ದ 27 ಅಭ್ಯರ್ಥಿಗಳನ್ನೂ ಸೇರಿಸಿದರೆ, ಇದುವರೆಗೆ ಒಟ್ಟು 127 ಮಂದಿ ನಾಮಪತ್ರ ಸಲ್ಲಿಸಿದಂತಾಗಿದೆ.

ಮತದಾರರ ಪಟ್ಟಿ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಕೋರಿ ರಾಜ್ಯದ ವಿವಿಧೆಡೆಯಿಂದ ಒಟ್ಟು 17.36 ಲಕ್ಷ ಅರ್ಜಿಗಳು ಬಂದಿವೆ. ಇದುವರೆಗೆ 11.26 ಲಕ್ಷ ಅರ್ಜಿಗಳನ್ನು ಪರಿಶೀಲಿಸಲಾಗಿದೆ. ಇನ್ನೊಂದು ವಾರದಲ್ಲಿ ಎಲ್ಲ ಅರ್ಜಿಗಳನ್ನು ಪರಿಶೀಲಿಸಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಅನಿಲ್ ಕುಮಾರ್ ಝಾ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.