ಬೆಳಗಾವಿ: ‘ಹಾಲಿ ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಿಂದ ಇಲ್ಲಿಯವರೆಗೆ ಭೂಮಿ ಡಿನೋಟಿಫೈಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತನಿಖೆ ನಡೆಸಲು ನಿರ್ಧರಿಸಿದರೆ ಸ್ವಾಗತಿಸಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುರುವಾರ ಹೇಳಿದರು.
‘ಡಿನೋಟಿಫೈ ಪ್ರಕರಣಗಳ ಬಗೆಗೆ ಕೇಂದ್ರ ಸರ್ಕಾರ ಯಾವುದೇ ರೀತಿಯ ತನಿಖೆ ಕೈಗೊಂಡರೂ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
‘ಸಚಿವ ಎಸ್.ಎಂ. ಕೃಷ್ಣ ಕಾಲದಲ್ಲಿ 4,466 ಎಕರೆ ಭೂಮಿಯನ್ನು ಡಿನೋಟಿಫೈ ಮಾಡಲಾಗಿದೆ. ಆಗ ಅದರ ವಿರುದ್ಧ ಧ್ವನಿ ಎತ್ತಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಈಗ ಮೌನವಾಗಿರುವುದು ಏಕೆ’ ಎಂದು ಅವರು ಪ್ರಶ್ನಿಸಿದರು.
‘ಪ್ರಧಾನಮಂತ್ರಿಯವರ ಬಗ್ಗೆ ಅಪಾರ ಗೌರವವಿದೆ. ಆದರೆ ‘2ಜಿ’ ಹಗರಣದಲ್ಲಿ ಆಪಾದನೆಗೆ ಗುರಿಯಾಗಿದ್ದಾರೆ. ಹಗರಣ ಕುರಿತು ಸಮಗ್ರ ತನಿಖೆ ಕೈಗೊಳ್ಳುವ ಮೂಲಕ ಆಪಾದನೆಯಿಂದ ಮುಕ್ತರಾಗಬೇಕು’ ಎಂದು ಅವರು ಆಗ್ರಹಿಸಿದರು.
‘ರಾಜ್ಯ ಸರ್ಕಾರದ ಸಾಧನೆ ಬಗೆಗೆ ಟೀಕೆ ಮಾಡುತ್ತಿರುವ ಪ್ರತಿಪಕ್ಷ ನಾಯಕರಿಗೆ ಜಿ.ಪಂ. ಹಾಗೂ ತಾ.ಪಂ. ಚುನಾವಣೆ ಫಲಿತಾಂಶದ ಮೂಲಕ ಜನರು ಉತ್ತರ ನೀಡಲಿದ್ದಾರೆ’ ಎಂದು ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.