ADVERTISEMENT

ಡಿವಿಎಸ್ ಕೊಟ್ಟ ಮಾತಿಗೆ ತಪ್ಪದಿರಲಿ

​ಪ್ರಜಾವಾಣಿ ವಾರ್ತೆ
Published 8 ಜನವರಿ 2012, 19:30 IST
Last Updated 8 ಜನವರಿ 2012, 19:30 IST

ಶಿವಮೊಗ್ಗ: ಸಿ.ಎಂ. ಹುದ್ದೆಗೆ ಸದಾನಂದಗೌಡರ ಹೆಸರನ್ನು ಸೂಚಿಸಿದ್ದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ವಿನಃ ಪಕ್ಷದ ವರಿಷ್ಠರಲ್ಲ ಎಂಬುದನ್ನು ಮುಖ್ಯಮಂತ್ರಿ ಅವರು ಮರೆಯಬಾರದು ಎಂದು ಅಬಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.

ನಗರದ ಕಾರ್ಯಕ್ರಮವೊಂದಕ್ಕೆ ಭಾನುವಾರ ಆಗಮಿಸಿದ್ದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.  ಸದಾನಂದಗೌಡರು ಪ್ರತಿಯೊಂದು ವಿಷಯಕ್ಕೂ ಪಕ್ಷದ ವರಿಷ್ಠರ ಮೊರೆ ಹೋಗುವುದು ಸರಿಯಲ್ಲ. ಅವರು ಮುಖ್ಯಮಂತ್ರಿಯಾಗಿದ್ದು ವರಿಷ್ಠರ ಅಭ್ಯರ್ಥಿಯಾಗಿ ಅಲ್ಲ. ಬದಲಾಗಿ ಯಡಿಯೂರಪ್ಪನವರ ಅಭ್ಯರ್ಥಿಯಾಗಿ ಎಂಬುದನ್ನು ಮೊದಲು ಅರಿಯಬೇಕು ಎಂದರು.

ಸದಾನಂದಗೌಡರು ಮುಖ್ಯಮಂತ್ರಿಯಾಗುವ ಸಂದರ್ಭದಲ್ಲಿ ಯಡಿಯೂರಪ್ಪನವರಿಗೆ ನೀಡಿದ ಮಾತನ್ನು ಮರೆಯಬಾರದು ಎಂದು ಸೂಚ್ಯವಾಗಿ ಹೇಳಿದರು.

ADVERTISEMENT

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ರಾಜ್ಯದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಅಲ್ಲದೆ, ಯಡಿಯೂರಪ್ಪ ಅವರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಮತ್ತೆ ಮುಖ್ಯಮಂತ್ರಿ ಮಾಡಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.