ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ನೇತೃತ್ವದಲ್ಲಿ ಇದೇ 14ರಂದು ಕೆಪಿಸಿಸಿ ಚುನಾವಣಾ ಸಮಿತಿ ಹಾಗೂ ಪ್ರದೇಶ ಕಾಂಗ್ರೆಸ್ ಸಮನ್ವಯ ಸಮಿತಿಯ ಸಭೆ ನಡೆಯಲಿದೆ.
ಈ ಮೊದಲು ಡಿಸೆಂಬರ್ 15ಕ್ಕೆ ಎರಡೂ ಸಭೆಗಳನ್ನು ನಿಗದಿ ಮಾಡಲಾಗಿತ್ತು. ಆದರೆ, ಒಂದು ದಿನ ಮುಂಚಿತವಾಗಿ (ಡಿ.14) ದಿಗ್ವಿಜಯ್ ಸಿಂಗ್ ಅವರು ಬೆಂಗಳೂರಿಗೆ ಬರಲಿದ್ದು, ಎರಡೂ ಸಭೆಗಳು ಅದೇ ದಿನ ನಡೆಯಲಿವೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.
ಲೋಕಸಭಾ ಚುನಾವಣೆ ತಯಾರಿ ಕುರಿತು ಚುನಾವಣಾ ಸಮಿತಿಯ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಕೆಪಿಸಿಸಿ ನಿಯೋಜಿಸಿದ್ದ ವೀಕ್ಷಕರು ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳಿಗೆ ಭೇಟಿನೀಡಿ ಸಂಭವನೀಯ ಅಭ್ಯರ್ಥಿಗಳ ಕುರಿತು ನೀಡಿರುವ ವರದಿ, ಕೆಪಿಸಿಸಿ ಪದಾಧಿಕಾರಿಗಳು ನೀಡಿರುವ ಪಟ್ಟಿ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಗಳು ಕಳುಹಿಸಿರುವ ವರದಿಗಳ ಕುರಿತು ಚರ್ಚೆ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಚುನಾವಣಾ ಸಮಿತಿ ಸಭೆ ಬಳಿಕ ಸಮನ್ವಯ ಸಮಿತಿ ಸಭೆ ನಡೆಯಲಿದೆ. ದಿಗ್ವಿಜಯ್ ಸಿಂಗ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಗೃಹ ಸಚಿವ ಕೆ.ಜೆ.ಜಾರ್ಜ್, ಶಾಸಕ ಡಿ.ಕೆ.ಶಿವಕುಮಾರ್, ಎಐಸಿಸಿ ಕಾರ್ಯದರ್ಶಿ ಶಾಂತಾರಾಂ ನಾಯ್ಕ್ ಮತ್ತು ಚೆಲ್ಲಕುಮಾರ್ ಸಭೆಯಲ್ಲಿ ಭಾಗವಹಿಸುವರು.
ನಿಗಮ, ಮಂಡಳಿಗಳಿಗೆ ನೇಮಕಾತಿ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.