
ಬೆಂಗಳೂರು: ತಂಬಾಕು ಉತ್ಪನ್ನಗಳ ಸೇವನೆಯಿಂದ ರಾಜ್ಯದಲ್ಲಿ ಪ್ರತಿನಿತ್ಯ 200 ಮಂದಿ ಸಾವಿಗೀಡಾಗುತ್ತಿದ್ದು, ಈ ಸಂಖ್ಯೆಯನ್ನು ಶೂನ್ಯಕ್ಕೆ ತರಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಗ್ಯ ಸಚಿವ ಕೆ.ಆರ್. ರಮೇಶ್ ಕುಮಾರ್ ಹೇಳಿದರು.
ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ವತಿಯಿಂದ ವಿಕಾಸಸೌಧದಲ್ಲಿ ಗುರುವಾರ ಏರ್ಪಡಿಸಿದ್ದ ‘ತಂಬಾಕು ಬಳಕೆ ಮತ್ತು ಕರ್ನಾಟಕದಲ್ಲಿ ಮಕ್ಕಳ ಮೇಲೆ ತಂಬಾಕು ಬಳಕೆಯ ಪರಿಣಾಮಗಳು’ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು.
‘ಕ್ಯಾನ್ಸರ್ ರೋಗಿಗಳ ಸಂಖ್ಯೆಯಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಆರೋಗ್ಯ ಸಚಿವನಾಗಿ ಇದಕ್ಕಿಂತ ದೊಡ್ಡ ಗೌರವ ಬೇಕಾ?’ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಶಾಲಾ– ಕಾಲೇಜುಗಳ ಸುತ್ತಮುತ್ತಲ ಅಂಗಡಿಗಳಲ್ಲಿ ಸಿಗರೇಟು, ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು ಉತ್ಪನ್ನಗಳು ಮಾರಾಟವಾಗುತ್ತಿದ್ದರೂ, ತಡೆಗಟ್ಟಲು ಸಾಧ್ಯವಾಗುತ್ತಿಲ್ಲ.
ಜಾತಿ, ಧರ್ಮದ ಭೇದವಿಲ್ಲದೆ ವಿದ್ಯಾರ್ಥಿಗಳು ಮಾದಕ ದ್ರವ್ಯ ಸೇವನೆ ಚಟಕ್ಕೆ ಬಲಿಯಾಗುತ್ತಿದ್ದಾರೆ ಎಂದು ವಿಷಾದಿಸಿದರು. ಮಾದಕ ದ್ರವ್ಯ ಸೇವನೆ ಚಟದಿಂದ ಮಕ್ಕಳು ಕ್ಯಾನ್ಸರ್ಗೆ ತುತ್ತಾದರೆ ಪೋಷಕರು ನೋವು ಅನುಭವಿಸುತ್ತಾರೆ. ಹಾಗಾಗಿ ಮಕ್ಕಳು ದುಶ್ಚಟಗಳಿಂದ ದೂರ ಇರಬೇಕು ಎಂದರು.
ಕ್ಯಾನ್ಸರ್ ರೋಗದಿಂದ ಉಂಟಾಗುತ್ತಿರುವ ಸಾವು ತಡೆಗಟ್ಟಲು ತಜ್ಞರು, ಸಾರ್ವಜನಿಕರ ಸಹಾಯ ಪಡೆಯಲಾಗುವುದು. ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಈ ನಿಟ್ಟಿನಲ್ಲಿ ಇನ್ನಷ್ಟು ಒಳ್ಳೆಯ ಕೆಲಸ ಮಾಡಬೇಕು ಎಂದು ಅವರು ಸಲಹೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.