ADVERTISEMENT

ತಮಿಳುನಾಡು ಡಿವಿಎಸಿ ಆದೇಶ ರದ್ದು

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2011, 19:30 IST
Last Updated 16 ಸೆಪ್ಟೆಂಬರ್ 2011, 19:30 IST

ಬೆಂಗಳೂರು: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಅಕ್ರಮ ಆಸ್ತಿ ಸಂಪಾದಿಸಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಮುಂದುವರಿಸುವ ತಮಿಳುನಾಡು ಜಾಗೃತ ಮತ್ತು ಭ್ರಷ್ಟಾಚಾರ ನಿಯಂತ್ರಣ ನಿರ್ದೇಶನಾಲಯದ (ಡಿವಿಎಸಿ) ಆದೇಶವನ್ನು ರದ್ದುಮಾಡಿರುವ ಹೈಕೋರ್ಟ್, ಸುಪ್ರೀಂಕೋರ್ಟ್ ಆದೇಶದಂತೆ ನಿತ್ಯ ವಿಚಾರಣೆ ನಡೆಸುವಂತೆ ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ಆದೇಶಿಸಿದೆ.

ಜಯಲಲಿತಾ ವಿರುದ್ಧದ ಪ್ರಕರಣದ ತನಿಖೆ ನಡೆಸಿದ್ದ ಡಿವಿಎಸಿ ಹಲವು ವರ್ಷಗಳ ಹಿಂದೆಯೇ ಆರೋಪಪಟ್ಟಿ ಸಲ್ಲಿಸಿತ್ತು. ಪ್ರಕರಣದ ವಿಚಾರಣೆ ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಪ್ರಗತಿಯಲ್ಲಿದೆ. ಆದರೆ ಪ್ರಕರಣದ ಬಗ್ಗೆ ತನಿಖೆ ಮುಂದುವರೆಸಲು ತೀರ್ಮಾನಿಸಿರುವುದಾಗಿ 2011ರ ಜೂನ್ 15ರಂದು ಡಿವಿಎಸಿ ವಿಶೇಷ ನ್ಯಾಯಾಲಯಕ್ಕೆ ತಿಳಿಸಿತ್ತು. ಈ ನಿರ್ಧಾರವನ್ನು ಪ್ರಶ್ನಿಸಿ ಡಿಎಂಕೆ ಪ್ರಧಾನ ಕಾರ್ಯದರ್ಶಿ ಕೆ.ಅನ್ಬಳಗನ್ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ.ಜಗನ್ನಾಥನ್ ಶುಕ್ರವಾರ ತೀರ್ಪು ಪ್ರಕಟಿಸಿದರು. ಪ್ರಕರಣದ ವಿಚಾರಣೆ ಹಲವು ಹಂತಗಳನ್ನು ದಾಟಿ ಬಂದಿದ್ದು, ಆರೋಪಿಯ ಹೇಳಿಕೆ ದಾಖಲಿಸಿಕೊಳ್ಳುವ ಹಂತದಲ್ಲಿದೆ. ಇಂತಹ ಸಂದರ್ಭದಲ್ಲಿ ತನಿಖೆ ಮುಂದುವರಿಸಲು ಅವಕಾಶ ನೀಡುವುದು ಸಾಧುವಲ್ಲ ಎಂದು ತೀರ್ಪಿನಲ್ಲಿ ಅಭಿಪ್ರಾಯಪಟ್ಟಿರುವ ಅವರು, ಡಿವಿಎಸಿ ತೀರ್ಮಾನವನ್ನು ರದ್ದು ಮಾಡಿದರು.

ಈ ಪ್ರಕರಣದಲ್ಲಿ ಡಿವಿಎಸಿ ನಿರ್ಧಾರವನ್ನು ಪುರಸ್ಕರಿಸಲು ಸಾಧ್ಯವಿಲ್ಲ~ ಎಂಬ ಅಭಿಪ್ರಾಯವನ್ನೂ ಕೋರ್ಟ್ ವ್ಯಕ್ತಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.