ADVERTISEMENT

ತುಂಗಭದ್ರಾ ಜಲಾಶಯದ ನೀರು ಬಿಡಲು ಒತ್ತಾಯ : ಪ್ರತಿಭಟನೆ ತಡೆಯಲು ಸಂಸದರ ಮನೆ ಮುಂದೆ ಬಿಗಿ ಕಾವಲು

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2018, 7:26 IST
Last Updated 19 ಮಾರ್ಚ್ 2018, 7:26 IST
ತುಂಗಭದ್ರಾ ಜಲಾಶಯದ ನೀರು ಬಿಡಲು ಒತ್ತಾಯ : ಪ್ರತಿಭಟನೆ ತಡೆಯಲು ಸಂಸದರ ಮನೆ ಮುಂದೆ ಬಿಗಿ ಕಾವಲು
ತುಂಗಭದ್ರಾ ಜಲಾಶಯದ ನೀರು ಬಿಡಲು ಒತ್ತಾಯ : ಪ್ರತಿಭಟನೆ ತಡೆಯಲು ಸಂಸದರ ಮನೆ ಮುಂದೆ ಬಿಗಿ ಕಾವಲು   

ಕೊಪ್ಪಳ: ತುಂಗಭದ್ರಾ ಅಚ್ಚುಕಟ್ಟು ಪ್ರದೇಶದವರಿಗೆ ಎರಡನೇ ಬೆಳೆಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನ ಸೆಳೆಯಲು ಯತ್ನಿಸಿರುವ ಸಂಸದ ಸಂಗಣ್ಣ ಅವರ ನಿವಾಸಕ್ಕೆ ಪೊಲೀಸರು ಬಿಗು ಕಾವಲು ಏರ್ಪಡಿಸಿದ್ದಾರೆ.

ನಗರದಲ್ಲಿನ ಬಸವೇಶ್ವರರ ಕಂಚಿನ ಪುತ್ಥಳಿ ಉದ್ಘಾಟನೆ ಮತ್ತು ಯಲಬುರ್ಗಾದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭಕ್ಕೆ ಮುಖ್ಯಮಂತ್ರಿ ಸೋಮವಾರ ಸಂಜೆ ಆಗಮಿಸಲಿದ್ದಾರೆ. ಆ ವೇಳೆ ಪ್ರತಿಭಟನೆಗೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗೆ ಸಿದ್ಧತೆ ನಡೆಸಿದ್ದರು.

ಪೊಲೀಸ್‌ ಕಾವಲಿನ ನಡುವೆ ಮಾತನಾಡಿದ ಸಂಸದ ಸಂಗಣ್ಣ,’ತುಂಗಭದ್ರಾ ಜಲಾಶಯದಿಂದ ಎರಡನೇ ಬೆಳೆಗೆ ನೀರು ಹರಿಸಬೇಕು. ನೀರು ಬಿಡಲು ಈ ಹಿಂದೆಯೂ ಮನವಿ ಮಾಡಿದ್ದೆವು. ಆದರೆ, ಸರ್ಕಾರ ಅದಕ್ಕೆ ಸ್ಪಂದಿಸಿಲ್ಲ. ಅದಕ್ಕಾಗಿ ಮುಖ್ಯಮಂತ್ರಿಯವರ ಗಮನ ಸೆಳೆಯಲು ಸಿದ್ಧತೆ ನಡೆಸಿದ್ದೆವು. ಆದರೆ, ಪೊಲೀಸರು ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡಿದ್ದಾರೆ. ತುಂಗಭದ್ರಾ ಅಣೆಕಟ್ಟೆ ಆಡಳಿತ ಮಂಡಳಿಯ‌ಲ್ಲಿ ಸಾಕಷ್ಟು ಭ್ರಷ್ಟರಿದ್ದಾರೆ. ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲು ಯತ್ನಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಹತ್ತಿಕ್ಕುವ ಪ್ರಯತ್ನ ಮಾಡಿದ್ದಾರೆ’ ಎಂದು ಆರೋಪಿಸಿದರು.

ADVERTISEMENT

ನಗರ ಸೇರಿದಂತೆ ಜಿಲ್ಲೆಯ ಪ್ರಮುಖ ಪ್ರದೇಶಗಳಲ್ಲಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಯಾವುದೇ ಪ್ರತಿಭಟನೆಗೆ ಅವಕಾಶವಿಲ್ಲ. ಹಾಗೊಂದು ವೇಳೆ ನಿಯಮ ಮೀರಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅನೂಪ್‌ ಎ.ಶೆಟ್ಟಿ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.