ಚಿತ್ರದುರ್ಗ: ನಗರದಲ್ಲಿ ಮೂರು ದಿನಗಳ ಕಾಲ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವೈವಿಧ್ಯಮಯ ಸಾಂಸ್ಕೃತಿಕ-ಶೈಕ್ಷಣಿಕ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪ್ರತಿಭಾ ಕಾರಂಜಿಯ ಸಮಾರೋಪ ಸಮಾರಂಭದಲ್ಲಿ ಸಂಸತ್ ಸದಸ್ಯ ಜನಾರ್ದನಸ್ವಾಮಿ ವಿಜೇತ ತಂಡಕ್ಕೆ ಪ್ರಶಸ್ತಿ ವಿತರಿಸಿದರು.
24 ಅಂಕಗಳೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಬಹುಮಾನ ಪಡೆಯಿತು. ಈ ತಂಡಕ್ಕೆ ರೂ. 10 ಸಾವಿರ ನಗದು ಬಹುಮಾನ ನೀಡಲಾಯಿತು. 15 ಅಂಕಗಳನ್ನು ಪಡೆದ ಉಡುಪಿ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಗಳು ಎರಡನೇ ಸ್ಥಾನ ಪಡೆದಿದ್ದು, ತಲಾ ರೂ. 4 ಸಾವಿರ ನಗದು ಮತ್ತು ಪ್ರಶಸ್ತಿ ಫಲಕ ಪಡೆದವು. 12 ಅಂಕಗಳೊಂದಿಗೆ ಧಾರವಾಡ ಜಿಲ್ಲೆ ತೃತೀಯ ಸ್ಥಾನ ಪಡೆದಿದ್ದು, ರೂ. 6 ಸಾವಿರ ನಗದು ಬಹುಮಾನ ನೀಡಲಾಯಿತು.
ಜ. 6ರಿಂದ 8ವರೆಗೆ ನಡೆದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಮಕ್ಕಳ ಪ್ರತಿಭೆಗೆ ಸಾಕ್ಷಿಯಾಗಿದ್ದವು. 34 ಶೈಕ್ಷಣಿಕ ಜಿಲ್ಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. 33 ಸ್ಪರ್ಧೆಗಳಲ್ಲಿ ಸುಮಾರು 2,200 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.