ಕುಶಾಲನಗರ: ಪ್ರಮುಖ ಪ್ರವಾಸಿ ಕೇಂದ್ರವೂ ಆಗಿರುವ ದುಬಾರೆ ಅರಣ್ಯ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ಕಾಳ್ಗಿಚ್ಚು ಕಾಣಿಸಿಕೊಂಡಿದ್ದು, ಬಹುತೇಕ ಭಾಗ ಸುಟ್ಟಿದೆ.
ಗಾಳಿಯ ರಭಸಕ್ಕೆ ಅರಣ್ಯದಲ್ಲಿ ಬೆಂಕಿ ವ್ಯಾಪಿಸಿತ್ತು. ಕುಶಾಲನಗರ ವಲಯ ಅರಣ್ಯಾಧಿಕಾರಿ ಅರುಣ್ ನೇತೃತ್ವದಲ್ಲಿ ಸಿಬ್ಬಂದಿ ಬೆಂಕಿ ನಂದಿಸಲು ಶ್ರಮಿಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ಸಹ ಕೈಜೋಡಿಸಿದರು.
ಆದರೆ, ಅರಣ್ಯ ಪ್ರದೇಶದಲ್ಲಿ ಅಗ್ನಿಶಾಮಕ ವಾಹನ ಸಂಚರಿಸಲು ಸಾಧ್ಯವಾಗಲಿಲ್ಲ. 35ಕ್ಕೂ ಅಧಿಕ ಸಿಬ್ಬಂದಿ ಹಸಿರು ಎಲೆ ಮತ್ತು ಕೋಲುಗಳಿಂದ ಬಡಿಯುವ ಮೂಲಕ ಮೂರು ಗಂಟೆಗಳಿಗೂ ಹೆಚ್ಚಿನ ಕಾಲ ಹರಸಾಹಸ ಪಟ್ಟು ಬೆಂಕಿ ಹತೋಟಿಗೆ ತಂದರು. ಬೆಂಕಿ ನಂದಿದ ನಂತರವೂ ಮತ್ತೆ ಕಿಡಿಯಿಂದ ವ್ಯಾಪಿಸುವ ಸಾಧ್ಯತೆಗಳನ್ನು ತಡೆಯಲು ಸಿಬ್ಬಂದಿ ಅರಣ್ಯ ಭಾಗದಲ್ಲೇ ಬೀಡುಬಿಟ್ಟಿದ್ದಾರೆ.
ದುಬಾರೆ ಸಾಕಾನೆ ಶಿಬಿರದ ಬಳಿಯೇ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಶಿಬಿರಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಸಾಕಾನೆಗಳನ್ನು ಅರಣ್ಯ ಪ್ರದೇಶಕ್ಕೆ ಬಿಡದಿರಲೂ ಅಧಿಕಾರಿಗಳು ನಿರ್ಧರಿಸಿದ್ದಾರೆ.
ಮಡಿಕೇರಿ ಉಪವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್, ಸೋಮವಾರಪೇಟೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಸ್.ಚಿಣ್ಣಪ್ಪ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.