ADVERTISEMENT

ದೇವೇಗೌಡರ ಮೊರೆಹೋದ ಶಾಸಕರು

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2011, 18:25 IST
Last Updated 15 ಫೆಬ್ರುವರಿ 2011, 18:25 IST

ಬೆಂಗಳೂರು:ಅನರ್ಹಗೊಂಡಿರುವ ಐವರು ಪಕ್ಷೇತರ ಶಾಸಕರು ಮಂಗಳವಾರ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದು ಸೇರಿದಂತೆ ಮುಂದೆ ಕೈಗೊಳ್ಳಬೇಕಾದ ಕಾನೂನು ಹೋರಾಟದ ಬಗ್ಗೆ ಚರ್ಚೆ ನಡೆಸಿದರು.

ಕಳೆದ ಅ.11ರಂದು ಐವರು ಪಕ್ಷೇತರ ಶಾಸಕರನ್ನು ಅನರ್ಹಗೊಳಿಸಿರುವ ವಿಧಾನ ಸಭೆಯ ಸ್ಪೀಕರ್ ಕೆ.ಜಿ.ಬೋಪಯ್ಯ ಕ್ರಮವನ್ನು ಹೈಕೋರ್ಟ್ ಎತ್ತಿಹಿಡಿದಿರುವ ಹಿನ್ನೆಲೆಯಲ್ಲಿ ಮುಂದಿನ ರಾಜಕೀಯ ಭವಿಷ್ಯದ ಬಗ್ಗೆ ಆತಂಕಗೊಂಡಿರುವ ಪಿ.ಎಂ.ನರೇಂದ್ರಸ್ವಾಮಿ, ಶಿವರಾಜ ತಂಗಡಗಿ, ಗೂಳಿಹಟ್ಟಿ ಶೇಖರ್, ವೆಂಕಟರಮಣಪ್ಪ, ಡಿ.ಸುಧಾಕರ್ ಅವರು ದೇವೇಗೌಡರ ಮೊರೆ ಹೋಗಿದ್ದಾರೆ.

ಸೂಕ್ತ ದಾಖಲೆಗಳೊಂದಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹೋರಾಟ ಮಾಡಲು ಅವಕಾಶ ಇದ್ದೇ ಇದೆ. ಹೀಗಾಗಿ ಆತಂಕಪಡುವ ಅಗತ್ಯವಿಲ್ಲ ಎಂದು ದೇವೇಗೌಡರು ಅನರ್ಹ ಶಾಸಕರಿಗೆ ಧೈರ್ಯ ತುಂಬಿದರು. ಹೈಕೋರ್ಟ್ ತೀರ್ಪಿನ ಪೂರ್ಣ ಪಾಠದ ವಿವರಗಳು ಲಭ್ಯವಾದ ನಂತರ ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಗುರುವಾರ ಸುಪ್ರೀಂಗೆ: ಬುಧವಾರ ರಜೆ ಇರುವ ಕಾರಣ ಗುರುವಾರ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ನರೇಂದ್ರಸ್ವಾಮಿ ತಿಳಿಸಿದರು. ಹೈಕೋರ್ಟ್ ತೀರ್ಪಿನ ಅಧಿಕೃತ ಪ್ರತಿಗಳು ಲಭ್ಯವಾದ ತಕ್ಷಣವೇ ಮುಂದಿನ ಹೋರಾಟಕ್ಕೆ ಸಜ್ಜು ಮಾಡಲಾಗುವುದು ಎಂದು ಹೇಳಿದರು.
ದೇವೇಗೌಡರ ಭೇಟಿಗೂ ಮುನ್ನ ಅವರು ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.