ADVERTISEMENT

ನಕಲಿ ಅಂಕ ಪಟ್ಟಿ: ಗ್ರಾಮ ಲೆಕ್ಕಿಗರ ದಾಖಲೆ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 17 ಜುಲೈ 2013, 19:45 IST
Last Updated 17 ಜುಲೈ 2013, 19:45 IST

ಬೆಂಗಳೂರು: ನಕಲಿ ಅಂಕಪಟ್ಟಿಗಳನ್ನು ನೀಡಿ ಗ್ರಾಮ ಲೆಕ್ಕಿಗರಾಗಿ ನೇಮಕಗೊಂಡಿರುವ ಪ್ರಕರಣ ಉಡುಪಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗ್ರಾಮ ಲೆಕ್ಕಿಗರಾಗಿ ನೇಮಕಗೊಂಡವರ ಮೂಲ ದಾಖಲೆಗಳ ಪರಿಶೀಲನೆಗೆ ಸೂಚಿಸಲಾಗುವುದು ಎಂದು ಕಂದಾಯ ಸಚಿವ ವಿ.ಶ್ರೀನಿವಾಸ ಪ್ರಸಾದ್ ತಿಳಿಸಿದರು.

ಬಿಜೆಪಿಯ ವಿ.ಸುನಿಲ್ ಕುಮಾರ್ ಗಮನ ಸೆಳೆಯುವ ಸೂಚನೆಗೆ ಬುಧವಾರ ವಿಧಾನಸಭೆಯಲ್ಲಿ ಉತ್ತರಿಸಿದ ಸಚಿವರು, ಗ್ರಾಮ ಲೆಕ್ಕಿಗರ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಸಲ್ಲಿಸಿರುವ ಮೂಲ ದಾಖಲೆಗಳ ನೈಜತೆ ಪರಿಶೀಲಿಸಿ, ಲೋಪಗಳು ಕಂಡುಬಂದರೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು ಎಂದರು.

ಉಡುಪಿ ಜಿಲ್ಲೆಯಲ್ಲಿ ಗ್ರಾಮ ಲೆಕ್ಕಿಗರಾಗಿ ನೇಮಕಗೊಂಡಿದ್ದ 24 ಮಂದಿ ಪೈಕಿ 19 ಮಂದಿ ಸಲ್ಲಿಸಿದ್ದ ಅಂಕಪಟ್ಟಿಗಳ ನೈಜತೆ ಪರಿಶೀಲಿಸಿದಾಗ, 8 ಮಂದಿ ನಕಲಿ ಅಂಕಪಟ್ಟಿ ಸಲ್ಲಿಸಿರುವುದು ಸಾಬೀತಾಗಿದೆ. ಅವರನ್ನು ಸೇವೆಯಿಂದ ವಜಾ ಮಾಡಿ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ತಿಳಿಸಿದರು.

ನಕಲಿ ಅಂಕಪಟ್ಟಿ ನೀಡಿದವರ ವಿವರ (ಉಡುಪಿ ಜಿಲ್ಲೆ): ಎಂ.ವೆಂಕಟೇಶ್, ಎಚ್.ಪಿ.ಬಸವರಾಜು, ಪಿ.ರಾಘವೇಂದ್ರ, ಕೆ.ಕುಮಾರ್, ಕೆ.ಎನ್.ಲಕ್ಷ್ಮಿನಾರಾಯಣ, ಜಯಲಕ್ಷ್ಮಿ, ಎನ್.ಕೆ.ಲೋಹಿತಾಶ್ವ, ಜಿ.ನಾಗರಾಜ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.