ADVERTISEMENT

ನಾಯಕತ್ವ ಬದಲಾವಣೆ ಆಗದಿದ್ದರೆ ಸರ್ಕಾರ ಪತನ

​ಪ್ರಜಾವಾಣಿ ವಾರ್ತೆ
Published 13 ಮೇ 2012, 19:30 IST
Last Updated 13 ಮೇ 2012, 19:30 IST

ಬೆಳಗಾವಿ: `ರಾಜ್ಯದಲ್ಲಿ ಬಿಜೆಪಿ ಸರ್ಕಾರ ಉಳಿಯಬೇಕು ಎಂದಾದರೆ ಕೂಡಲೇ ಮುಖ್ಯಮಂತ್ರಿ ಸದಾನಂದ ಗೌಡರಿಂದ ರಾಜೀನಾಮೆ ಪಡೆಯಬೇಕು. ಇಲ್ಲದಿದ್ದರೆ ಇನ್ನೊಂದು ದಿನದಲ್ಲಿ ಸರ್ಕಾರ ಪತನಗೊಳ್ಳುವ ಸಾಧ್ಯತೆ ಇದೆ~ ಎಂದು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಡಿ. ಲಕ್ಷ್ಮೀನಾರಾಯಣ ಭಾನುವಾರ ಇಲ್ಲಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು `ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬೆಂಬಲಿಸಿ ಇನ್ನೂ ಕೆಲವು ಸಚಿವರು ಹಾಗೂ 40ಕ್ಕೂ ಹೆಚ್ಚು ಶಾಸಕರು ಸೋಮವಾರ ರಾಜೀನಾಮೆ ನೀಡಲಿದ್ದಾರೆ.

ಬಿಜೆಪಿ ಸರ್ಕಾರ ಪತನಗೊಂಡರೆ ಅದಕ್ಕೆ ಮುಖ್ಯಮಂತ್ರಿ ಸದಾನಂದಗೌಡರೇ ಕಾರಣರಾಗುತ್ತಾರೆ. ಹೀಗಾಗಿ ರಾಜ್ಯದಲ್ಲಿ ಬಿಜೆಪಿ ಉಳಿಯಬೇಕೆಂದರೆ ಕೂಡಲೇ ಹೈಕಮಾಂಡ್ ಮಧ್ಯ ಪ್ರವೇಶಿಸಿ ನಾಯಕತ್ವ ಬದಲಾವಣೆ ಮಾಡಬೇಕು~ ಎಂದು  ಒತ್ತಾಯಿಸಿದರು.

ಹೊಸ ಪಕ್ಷ: `ಯಡಿಯೂರಪ್ಪನವರ ಬೆಂಬಲಿಗ ಸಚಿವರು ಹಾಗೂ ಶಾಸಕರೆಲ್ಲ ಸೇರಿಕೊಂಡು ಎಲ್ಲ ಸಮಾಜದ ಆಶೋತ್ತರಗಳನ್ನು ಈಡೇರಿಸುವಂತಹ ಹೊಸ ಪಕ್ಷ ರಚಿಸಲು ಚಿಂತನೆ ನಡೆಸಿದ್ದೇವೆ. ಈ ಬಗ್ಗೆ ಬುಧವಾರ ಸಭೆ ಸೇರಿ ಅಂತಿಮವಾಗಿ ತೀರ್ಮಾನ ಕೈಗೊಳ್ಳುತ್ತೇವೆ~ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.