ADVERTISEMENT

ನಾಳೆ ಪಟೇಲ್ ಸ್ಮರಣೋತ್ಸವ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2013, 19:30 IST
Last Updated 10 ಡಿಸೆಂಬರ್ 2013, 19:30 IST

ದಾವಣಗೆರೆ: ಜೆ.ಎಚ್.ಪಟೇಲ್‌ ಪ್ರತಿಷ್ಠಾನದ ವತಿಯಿಂದ ಮಾಜಿ ಮುಖ್ಯಮಂತ್ರಿ ಜೆ.ಎಚ್‌.ಪಟೇಲ್‌ ಅವರ 13ನೇ ಸ್ಮರಣೋತ್ಸವ ಕಾರ್ಯಕ್ರಮವನ್ನು ಇದೇ 12ರಂದು ಬೆಳಿಗ್ಗೆ 11ಕ್ಕೆ ಬೆಂಗಳೂರಿನ ಅರಮನೆ ಮೈದಾನದ ‘ನಲಪತ್‌’ದಲ್ಲಿ ಆಯೋಜಿಸಲಾಗಿದೆ.

ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಹೇಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು ಹಾಗೂ ಸಮಾಜ ಯಾವ ದಿಕ್ಕಿನಲ್ಲಿ ಸಾಗಬೇಕು ಎಂಬುದರ ಕುರಿತು ಕಾರ್ಯಕ್ರಮದಲ್ಲಿ ಸಮಾಲೋಚನೆ ನಡೆಯಲಿದೆ. ಜೆ.ಎಚ್‌.ಪಟೇಲ್‌ ಅವರು ಹಿಂದೆ ಹಾಗೂ ಇಂದು ಬದಲಿಗೆ, ನಾಳಿನ ಬಗ್ಗೆ ಚಿಂತಿಸುತ್ತಿದ್ದರು. ಇಂತಹ ಅವರ ಹಲವು ತತ್ವ, ಸಿದ್ಧಾಂತಗಳ ಸ್ಮರಣೆ ನಡೆಯಲಿದೆ ಎಂದು ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ, ಮಾಜಿ ಶಾಸಕ ಮಹಿಮ ಜೆ.ಪಟೇಲ್‌ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

--ಚಿತ್ರದುರ್ಗ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರು ನೇತೃತ್ವ ವಹಿಸುವರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾರಂಭ ಉದ್ಘಾಟಿಸುವರು. ಹಿರಿಯ ಸಾಹಿತಿ ಡಾ.ಯು.ಆರ್‌.ಅನಂತಮೂರ್ತಿ ಅಧ್ಯಕ್ಷತೆ ವಹಿಸುವರು.

ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌್, ಉನ್ನತ ಶಿಕ್ಷಣ ಸಚಿವ ಆರ್‌.ವಿ.ದೇಶಪಾಂಡೆ, ತೋಟಗಾರಿಕೆ ಸಚಿವ ಶಾಮನೂರು ಶಿವಶಂಕರಪ್ಪ, ಸಹಕಾರ ಸಚಿವ ಎಚ್‌.ಎಸ್‌.ಮಹದೇವಪ್ರಸಾದ್‌, ಸಮಾಜ ಕಲ್ಯಾಣ ಸಚಿವ ಎಚ್‌.ಆಂಜನೇಯ, ಕೈಗಾರಿಕೋದ್ಯಮಿ ಶ್ರೀಹರಿ ಕೋಡೆ ಪಾಲ್ಗೊಳ್ಳುವರು ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.