ADVERTISEMENT

ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ತಿ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2011, 19:30 IST
Last Updated 13 ಅಕ್ಟೋಬರ್ 2011, 19:30 IST

ಶಿವಮೊಗ್ಗ: ರಾಜ್ಯದಲ್ಲಿ ಈಗಾಗಲೇ ಕೈಗೆತ್ತಿಕೊಂಡಿರುವ ಕಾಮಗಾರಿಗಳಿಗೆ ಸಕಾಲದಲ್ಲಿ ಆರ್ಥಿಕ ನೆರವು ಕಲ್ಪಿಸಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಭರವಸೆ ನೀಡಿದರು.

ನಗರದಲ್ಲಿ ಗುರುವಾರ ಕೆಎಸ್‌ಆರ್‌ಟಿಸಿ ನೂತನ ಬಸ್‌ನಿಲ್ದಾಣದ ಉದ್ಘಾಟನೆ ಸೇರಿದಂತೆ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ  ಮಾತನಾಡಿದರು.

`ಆಡಳಿತಕ್ಕೆ ಹೊಸ ರೂಪ ಕೊಡುವುದು, ಕೆಲಸ ಕಾರ್ಯಗಳ ವೇಗ ಹೆಚ್ಚಿಸುವುದು, ಜನಸಾಮಾನ್ಯರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ ನೀಡುವುದು ನನ್ನ ಉದ್ದೇಶ. ಶಿವಮೊಗ್ಗದಲ್ಲಿ ಗುರುವಾರ ರೂ 75 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದ್ದು, ಈ ಎಲ್ಲಾ ಕಾಮಗಾರಿಗಳಿಗೆ ಆದ್ಯತೆ ಮೇಲೆ ಅನುದಾನ ಒದಗಿಸಲಾಗುವುದು~ ಎಂದು ಭರವಸೆ ನೀಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ.ಎಸ್. ಈಶ್ವರಪ್ಪ, ಅಭಿವೃದ್ಧಿ ಕಾರ್ಯಗಳ ಅನುಷ್ಠಾನದ ಮೂಲಕ ರಾಜ್ಯವನ್ನು ದ್ವಿತೀಯ ಸ್ಥಾನಕ್ಕೆ ಕೊಂಡೊಯ್ದ ಕೀರ್ತಿ ಯಡಿಯೂರಪ್ಪ ಅವರಿಗೆ ಸಲ್ಲಬೇಕು ಎಂದರು.

ಸಮಾರಂಭದಲ್ಲಿ ಬಿಎಸ್ ವೈ  ಅವರನ್ನು ನಗರಸಭೆ ವತಿಯಿಂದ ಅಭಿನಂದಿಸಲಾಯಿತು. ಇದೇ ಸಮಾರಂಭದಲ್ಲಿ `ನೈರ್ಮಲ್ಯ ಪ್ರಶಸ್ತಿ~ ಪ್ರದಾನ ಮಾಡಲಾಯಿತು. ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಗೌರವ್‌ಗುಪ್ತ ಪ್ರಾಸ್ತಾವಿಕ ಮಾತನಾಡಿದರು. ಜಿಲ್ಲಾಧಿಕಾರಿ ವಿ. ಪೊನ್ನುರಾಜ್ ಸ್ವಾಗತಿಸಿದರು.

ವೀರ ಶಿವಪ್ಪನಾಯಕ  ಬಸ್ ನಿಲ್ದಾಣ
24 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಶಿವಮೊಗ್ಗದ ಕೆಎಸ್‌ಆರ್‌ಟಿಸಿಯ ನೂತನ ಬಸ್‌ನಿಲ್ದಾಣಕ್ಕೆ `ವೀರ ಶಿವಪ್ಪನಾಯಕ ಬಸ್‌ನಿಲ್ದಾಣ~ ಎಂದು ನಾಮಕರಣ ಮಾಡಲಾಗಿದೆ ಎಂದು ಸಾರಿಗೆ ಸಚಿವ ಆರ್. ಅಶೋಕ್ ಘೋಷಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿವಮೊಗ್ಗ ನಗರದಲ್ಲಿ ಸಿಟಿ ಬಸ್‌ಗಳನ್ನು ಓಡಿಸಲು ಕೆಎಸ್‌ಆರ್‌ಟಿಸಿ ಸಿದ್ಧವಿದೆ. ಇದಕ್ಕೆ ಸ್ಥಳೀಯ ಜನಪ್ರತಿನಿಧಿಗಳ ಸಹಕಾರ ಅಗತ್ಯ. ಅಲ್ಲದೇ, ಇಲ್ಲಿಗೆ `ಸ್ಲೀಪರ್ ಬಸ್~ಗಳನ್ನು ನೀಡಲಾಗುವುದು. ಈ ಸಂಬಂಧ ನಿಗಮದ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಚರ್ಚಿಸಲಾಗುವುದು.

ವಿಭಾಗೀಯ ಕಚೇರಿ ಮಾಡಲು 400 ಬಸ್‌ಗಳು ಬೇಕು. ಈಗ ಶಿವಮೊಗ್ಗದಲ್ಲಿ 200 ಬಸ್‌ಗಳು ಓಡಾಟ ನಡೆಸುತ್ತಿವೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಚಿಂತನೆ ನಡೆಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.