ಹಾವೇರಿ: `ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಮಾತ್ರ ಟಿಕೆಟ್ ನೀಡಲಾಗುವುದು~ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಹೇಳಿದರು.
ಭಾನುವಾರ ಕಾಗಿನೆಲೆಗೆ ತೆರಳುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷನಿಷ್ಠೆ ಹೊಂದಿದ ಸಾಕಷ್ಟು ಕಾರ್ಯಕರ್ತರಿದ್ದಾರೆ. ಹೊರಗಿನಿಂದ ಬಂದವರಲ್ಲಿ ಕೆಲವರು ಪಕ್ಷಕ್ಕೆ ಆಸ್ತಿಯಾಗಿದ್ದಾರೆ. ಇನ್ನೂ ಕೆಲವರು ಅನವಶ್ಯಕ ಗೊಂದಲ ಸೃಷ್ಟಿಸುತ್ತಿದ್ದಾರೆ. ಇಂತಹ ವ್ಯಕ್ತಿಗಳಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂದರು.
ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಅವರಿಗೆ ಮಾತ್ರ ಟಿಕೆಟ್ ನೀಡಿ ಕನಿಷ್ಠ 150 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಅವರು ಹೇಳಿದರು.
ನಾಲ್ಕು ವರ್ಷಗಳ ಅವಧಿಯಲ್ಲಿ ಪಕ್ಷದಲ್ಲಿ ಉಂಟಾಗಿರುವ ಗೊಂದಲಗಳಿಗೆ ವಿರೋಧ ಪಕ್ಷ ಎಷ್ಟು ಕಾರಣವಾಗಿದೆಯೋ ನಮ್ಮ ಪಕ್ಷದ ಮುಖಂಡರು ಸಹ ಅಷ್ಟೇ ಕಾರಣವಾಗಿದ್ದಾರೆ. ಆದರೆ, ಪಕ್ಷದ ಹಿರಿಯರ ಪ್ರಾಮಾಣಿಕತೆ ಹಾಗೂ ನಿಷ್ಠಾವಂತ ಕಾರ್ಯಕರ್ತರ ಶ್ರಮದಿಂದ ಪಕ್ಷ ಒಡೆಯುವುದಿಲ್ಲ.
ನಾಯಕತ್ವ ಬದಲಾವಣೆ ಹಾಗೂ ಯಡಿಯೂರಪ್ಪ ಅವರಿಗೆ ಸ್ಥಾನಮಾನ ನೀಡುವ ಬಗ್ಗೆ ವರಿಷ್ಠರು ನಿರ್ಧರಿಸಲಿದ್ದಾರೆ ಎಂದು ತಿಳಿಸಿದರು.ಯಡಿಯೂರಪ್ಪ ಅವರು 70 ಶಾಸಕರು ತಮ್ಮ ಬಳಿ ಇದ್ದಾರೆ ಎಂದು ಶಿವಮೊಗ್ಗದಲ್ಲಿ ಹೇಳಿದ್ದಾರಲ್ಲ ಎಂದಾಗ, 120 ಶಾಸಕರು ಯಡಿಯೂರಪ್ಪ ಅವರ ಜತೆಗೆ ಇದ್ದಾರೆ ಎಂದು ಈಶ್ವರಪ್ಪ ವ್ಯಂಗ್ಯವಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.