ADVERTISEMENT

ಪಕ್ಷ ಸಂಘಟನೆಗೆ ಪ್ರವಾಸ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2012, 19:30 IST
Last Updated 6 ಆಗಸ್ಟ್ 2012, 19:30 IST

ಬೆಂಗಳೂರು: `ರಾಜ್ಯದಲ್ಲಿ ರಾಜಕೀಯ ಬೆಳವಣಿಗೆಗಳು ಊಹೆಗೂ ನಿಲುಕದ ರೀತಿಯಲ್ಲಿ ನಡೆಯುತ್ತಿವೆ. ಯಾವಾಗ ಬೇಕಾದರೂ ಚುನಾವಣೆ ಎದುರಾಗಬಹುದು. ಪಕ್ಷ ಸಂಘಟನೆಗಾಗಿ ಈ ತಿಂಗಳ ಮೂರನೇ ವಾರದಿಂದ ರಾಜ್ಯದಾದ್ಯಂತ ಪ್ರವಾಸ ಮಾಡುತ್ತೇನೆ~ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ತಿಳಿಸಿದರು.

ಸೋಮವಾರ ಪಕ್ಷದ ಕಾರ್ಯಕಾರಿಣಿ ಸಮಿತಿ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ರಾಜ್ಯದ 224 ಕ್ಷೇತ್ರಗಳಲ್ಲೂ ಪ್ರವಾಸ ಮಾಡುತ್ತೇನೆ~ ಎಂದು ಪ್ರಕಟಿಸಿದರು.

 ಈ ತಿಂಗಳ 16 ಅಥವಾ 17ರಂದು ಪಕ್ಷದ ರಾಜ್ಯ ಪರಿಷತ್ತಿನ ಸಭೆ ನಡೆಯಲಿದೆ. ಎಲ್ಲ ವಿಧಾನಸಭಾ ಕ್ಷೇತ್ರಗಳ ಪ್ರತಿನಿಧಿಗಳು, ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಸೋಮವಾರ ಕಾರ್ಯಕಾರಿಣಿ ಸಭೆ ಮತ್ತು ಕಳೆದ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು, ಪದಾಧಿಕಾರಿಗಳು, ಶಾಸಕರ ಸಭೆ ನಡೆಯಿತು. ಆಯಾ ಕ್ಷೇತ್ರಗಳಲ್ಲಿನ ಪಕ್ಷದ ಸ್ಥಿತಿಗತಿ, ಟಿಕೆಟ್ ಆಕಾಂಕ್ಷಿಗಳು, ಸಂಘಟನೆಯಲ್ಲಿನ ಕೊರತೆ, ಮುಂದಿನ ಚುನಾವಣೆಯಲ್ಲಿ ಗೆಲುವಿಗಾಗಿ ಅನುಸರಿಸಬೇಕಾದ ತಂತ್ರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಪಕ್ಷದ ಮೂಲಗಳು ತಿಳಿಸಿವೆ.

ವೀಕ್ಷಕರ ಭೇಟಿ: ರಾಜ್ಯಮಟ್ಟದಲ್ಲಿ ಬೇರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆ ಉದ್ಭವಿಸುವುದಿಲ್ಲ. ಬಹುತೇಕ ಕ್ಷೇತ್ರಗಳಲ್ಲಿ 3-4 ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಆದ್ದರಿಂದ ಕ್ಷೇತ್ರಗಳಿಗೆ ವೀಕ್ಷಕರನ್ನು ಕಳುಹಿಸಿ ವಸ್ತುಸ್ಥಿತಿ ಬಗ್ಗೆ ವರದಿ ತರಿಸಿಕೊಳ್ಳಲಾಗುವುದು. ಪ್ರವಾಸ ಸಂದರ್ಭದಲ್ಲಿ ಕ್ಷೇತ್ರಗಳಲ್ಲಿ ಕಾರ್ಯಕರ್ತರ ಅಭಿಪ್ರಾಯಗಳನ್ನು ಆಲಿಸಲಾಗುವುದು ಎಂದು ದೇವೇಗೌಡ ತಿಳಿಸಿದರು.

ಅಣ್ಣಾ ಹಜಾರೆ ಅವರು ತಮ್ಮ ತಂಡವನ್ನು ವಿಸರ್ಜಿಸಿರುವ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದರು.

`ಅಡ್ವಾಣಿ ಹೇಳಿಕೆ ವಸ್ತುಸ್ಥಿತಿ ಆಧರಿಸಿದೆ~
ರಾಷ್ಟ್ರದಲ್ಲಿನ ವಿದ್ಯಮಾನಗಳನ್ನು ನೋಡಿಯೇ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರು, 2014ರ ಲೋಕಸಭಾ ಚುನಾವಣೆ ನಂತರ ಕಾಂಗ್ರೆಸ್, ಬಿಜೆಪಿಯೇತರ ಪಕ್ಷದವರು ಪ್ರಧಾನಿಯಾಗಲಿದ್ದಾರೆ ಎಂದು ಹೇಳಿದ್ದಾರೆ. ಚುನಾವಣೆ ನಂತರ ಏನಾಗುತ್ತದೆ ಎಂದು ಈಗಲೇ ಹೇಳುವುದು ಕಷ್ಟ. ಅಪಾರ ಅನುಭವ ಇರುವ ಅಡ್ವಾಣಿ ಅವರು, ವಸ್ತುಸ್ಥಿತಿಯನ್ನು ಆಧರಿಸಿ ಮಾತನಾಡಿದ್ದಾರೆ.
 -ಎಚ್.ಡಿ.ದೇವೇಗೌಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.